ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್)ಯ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಟ್ವೀಟ್ ಮಾಡಿದ್ದು, ಸಿಎಪಿಎಫ್ ಕಾನ್ಸ್ಟೇಬಲ್ (ಜಿಡಿ) ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಇದು ನಿರ್ಧಾರವು ಪ್ರಾದೇಶಿಕ ಭಾಷೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರೋತ್ಸಾಹಿಸಲು ಪ್ರಧಾನಿ ಮೋದಿ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.
2024ರ ಜನವರಿ 1ರಿಂದ ಸಿಎಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು. ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಇರಲಿದೆ. ಆಕಾಂಕ್ಷಿಗಳು ತಮ್ಮ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಮತ್ತು ಅವರ ಆಯ್ಕೆಯ ಭವಿಷ್ಯವನ್ನು ಸುಧಾರಿಸುತ್ತಾರೆ ಎಂದು ಗೃಹ ಇಲಾಖೆ ಹೇಳಿದೆ.
ಸಿಎಪಿಎಫ್ನಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಾನ್ಸ್ಟೇಬಲ್ ಜಿಡಿ ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳನ್ನು ಆಕರ್ಷಿಸುವ ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಸ್ಥಳೀಯ ಯುವಕರು ತಮ್ಮ ಮಾತೃಭಾಷೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳುವ ಈ ಅವಕಾಶವನ್ನು ಬಳಸಿಕೊಳ್ಳಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ವ್ಯಾಪಕ ಪ್ರಚಾರವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ಸಚಿವಾಲಯವು ಪ್ರಾದೇಶಿಕ ಭಾಷೆಗಳ ಬಳಕೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದೂ ಹೇಳಿದೆ.
ಜೋಶಿ ಟ್ವೀಟ್: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೈಗೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರವೊಂದು ಇಂತಹ ನಿರ್ಣಯ ಕೈಗೊಂಡು ಸ್ಥಳೀಯ ಭಾಷೆಗಳಿಗೆ ಗೌರವ ನೀಡುವ ಹಾಗೂ ಅಭಿವೃದ್ಧಿಗೆ ಪೂರಕವಾದ ಕಾರ್ಯವನ್ನು ಮಾಡಿದೆ. ಈ ನಿರ್ಣಯದಿಂದ ರಾಜ್ಯದ ಹೆಚ್ಚು ಅಭ್ಯರ್ಥಿಗಳಿಗೆ ಈ ಸೇವೆಗೆ ಸೇರುವ ಅವಕಾಶ ದೊರೆಯಲಿದೆ. ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಆರ್ಪಿಎಫ್ ಪರೀಕ್ಷೆ; ಕನ್ನಡ ನಿರ್ಲಕ್ಷ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆಕ್ರೋಶ, ಮರು ಪರೀಕ್ಷೆಗೆ ಆಗ್ರಹ