ಜೈಪುರ್(ರಾಜಸ್ಥಾನ): ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಐವರು ವಿದ್ಯಾರ್ಥಿಗಳ ಮೇಲೆ SUV(ಕಾರು) ಹರಿದು ಹೋಗಿರುವ ಕಾರಣ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.
![Five students crushed to death](https://etvbharatimages.akamaized.net/etvbharat/prod-images/11145294_700_11145294_1616605531197.png)
ಮೃತರಲ್ಲಿ ಇಬ್ಬರು ಬಾಲಕರು ಹಾಗೂ ಮೂವರು ಬಾಲಕಿಯರು ಎಂದು ಗುರುತಿಸಲಾಗಿದೆ. ಜಲ್ಲೂರಿನ ಕಾರ್ಡಾ-ರಾಣಿವಾರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಎಲ್ಲ ಮಕ್ಕಳು ಶಾಲೆ ಮುಗಿಸಿಕೊಂಡು ಸಂಜೆ ವೇಳೆ ಮನೆಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಏಕಾಏಕಿ ವಿದ್ಯಾರ್ಥಿಗಳ ಮೇಲೆ ಹರಿದಿರುವ ಕಾರಿನ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಚಾಲಕ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆತನ ಬಂಧನ ಮಾಡಲಾಗಿದೆ. ಘಟನೆಯಲ್ಲಿ ಮೃತರನ್ನ ರಮಿಲಾ ದೇವಾಸಿ, ವರ್ಷಾ ದೇವಾಸಿ, ವಿಕ್ರಂ ಕುಮಾರ್, ಸುರೇಶ್ ಕುಮಾರ್ ಮತ್ತು ವೀಣಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಮಲಾ ಎಂಬ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ವಿದ್ಯಾರ್ಥಿಗಳ ಸಾವಿಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದು, ಗಾಯಗೊಂಡ ಬಾಲಕಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.