ಪಣಜಿ : ಇತ್ತೀಚೆಗಷ್ಟೇ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಸಾಧನೆಯ ನೈತಿಕ ಹೊಣೆ ಹೊತ್ತು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚೋಡಂಕರ್ ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿಗೆ ರವಾನಿಸಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಗೋವಾ ಡೆಸ್ಕ್ ಇನ್ಚಾರ್ಜ್ ದಿನೇಶ್ ಗುಂಡೂರಾವ್ ಮಂಗಳವಾರ ತಿಳಿಸಿದ್ದಾರೆ.
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ನಡೆದ ಇತ್ತೀಚಿನ ಚುನಾವಣೆಯಲ್ಲಿ ಚೋಡಂಕರ್ ಅವರು ರಾಜ್ಯ ಕಾಂಗ್ರೆಸ್ ಚುಕ್ಕಾಣಿ ಹಿಡಿದಿದ್ದರು. ಕಾಂಗ್ರೆಸ್ 11 ಸ್ಥಾನಗಳನ್ನು ಅದರ ಮಿತ್ರಪಕ್ಷ ಗೋವಾ ಫಾರ್ವರ್ಡ್ ಪಾರ್ಟಿ ಒಂದು ಸ್ಥಾನವನ್ನಷ್ಟೆ ಗೆದ್ದುಕೊಂಡಿತ್ತು.
ಆದರೆ, ಬಿಜೆಪಿ 20 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಗುರುವಾರ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಚೋಡಂಕರ್ ಅವರು ತಮ್ಮ ಪಕ್ಷದ ಕಳಪೆ ಪ್ರದರ್ಶನದ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಲು ಮುಂದಾಗಿದ್ದರು.
ಚೋಡಂಕರ್ ಅವರ ರಾಜೀನಾಮೆ ಅಂಗೀಕರಿಸಿ ಅವರ ಸ್ಥಾನಕ್ಕೆ ಹೊಸ ವ್ಯಕ್ತಿ ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ನಾಯಕರಾದ ಸಂಕಲ್ಪ್ ಅಮೋನ್ಕರ್, ಅಲೆಕ್ಸೊ ಸಿಕ್ವೇರಾ ಮತ್ತು ಎಲ್ವಿಸ್ ಗೋಮ್ಸ್ ಅವರಂತಹವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಮೋನ್ಕರ್ ಮತ್ತು ಸಿಕ್ವೇರಾ ಅವರು ಗೆಲುವು ಸಾಧಿಸಿದ್ದಾರೆ. ಎಲ್ವಿಸ್ ಗೋಮ್ಸ್ ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಸೋತಿದ್ದಾರೆ ಎಂದರು.
ಮಾರ್ಗೋವ್ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿರುವ ಹಿರಿಯ ನಾಯಕ ದಿಗಂಬರ್ ಕಾಮತ್ ಅವರನ್ನು ಕರಾವಳಿ ರಾಜ್ಯದಲ್ಲಿ ಪಕ್ಷದ ಉನ್ನತ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಇದೆ. 2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಆದರೆ, ಅಂದು ಸರ್ಕಾರ ರಚಿಸಲು ಕಾಂಗ್ರೆಸ್ ವಿಫಲವಾಗಿತ್ತು. 13 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಕೆಲವು ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಈ ಬಾರಿ, 2017ರ ವೈಫಲ್ಯವನ್ನು ತಪ್ಪಿಸಲು ಕಾಂಗ್ರೆಸ್ ಸ್ಪಷ್ಟ ಜನಾದೇಶವನ್ನು ನಿರೀಕ್ಷಿಸಿತ್ತು. ಆದರೆ, ಬಹುಮತವನ್ನು ಗೆಲ್ಲುವಲ್ಲಿ ಕಾಂಗ್ರೆಸ್ ವಿಫಲವಾಗಿದೆ.