ಕಾಸರಗೋಡು (ಕೇರಳ): ತೌಕ್ತೆ ಚಂಡಮಾರುತ ಹಿನ್ನೆಲೆ ಕೇರಳದಲ್ಲಿ ಕಳೆದ ರಾತ್ರಿಯಿಂದ ವರುಣನ ಆರ್ಭಟ ಜೋರಾಗಿದೆ. ಕಾಸರಗೋಡಿನ ಚೆರಂಗೈ ಕರಾವಳಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಸಮುದ್ರ ತೀರದಲ್ಲಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಅಲೆಗಳು ಅಪ್ಪಳಿಸ ಹೊಡೆತಕ್ಕೆ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಘಟನೆಗೆ ಮುಂಚಿತವಾಗಿಯೇ ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟಡದಲ್ಲಿದ್ದ ಜನರನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಚೆರಂಗೈ ಪ್ರದೇಶದಲ್ಲಿ 35 ಸದಸ್ಯರನ್ನು ಒಳಗೊಂಡ ವಿಪತ್ತು ಪರಿಹಾರ ಹಾಗೂ ರಕ್ಷಣಾ ತಂಡವನ್ನು ಕಾಸರಗೋಡು ಜಿಲ್ಲಾಡಳಿತ ನಿಯೋಜಿಸಿದೆ. ಜಿಲ್ಲೆಯ ಹಲವಾರು ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಮನೆ, ಗದ್ದೆ, ತೋಟಗಳು ನಾಶವಾಗಿವೆ.
ಇದನ್ನೂ ಓದಿ: ಕೇರಳದಲ್ಲಿ ತೌಕ್ತೆ ಚಂಡಮಾರುತ.. ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.
ಕೇರಳ, ಕರ್ನಾಟಕ, ಲಕ್ಷದ್ವೀಪ, ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳ ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೇ 17 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.