ಕಡಪ(ಆಂಧ್ರ ಪ್ರದೇಶ): ಕಡಪ ಜಿಲ್ಲೆಯ ಓಟುಕೂರಿನ ಹಳೆಯ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗೋಡೌನ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಪ್ರದೇಶಗಳಿಗೆ ದೊಡ್ಡ ಪ್ರಮಾಣದ ಹೊಗೆ ವ್ಯಾಪಿಸಿದೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಒಂದು ಕಡೆ ಗಾಳಿ ಬೀಸುತ್ತಿದ್ದರಿಂದ ಬೆಂಕಿ ಹತೋಟಿಗೆ ಬರುತ್ತಿಲ್ಲ ಎಂದು ಅಗ್ನಿಶಾಮಕದಳದ ಸಿಬ್ಬಿಂದಿ ತಿಳಿಸಿದ್ದಾರೆ.
ಮಧ್ಯಾಹ್ನದ ಊಟದ ವೇಳೆ ಎಲ್ಲರೂ ಗೋದಾಮಿನಲ್ಲಿ ಕೆಲಸ ಮಾಡುತ್ತಿರುವಾಗ ಈ ಬೆಂಕಿ ಅವಘಡ ಸಂಭವಿಸಿದೆ. ಇದರ ಜತೆಗೆ ಗಾಳಿಯ ತೀವ್ರತೆ ಹೆಚ್ಚಾಗಿದ್ದರಿಂದ ಕ್ಷಣಾರ್ಧದಲ್ಲಿ ಬೆಂಕಿ ಎಲ್ಲ ಕಡೆ ವ್ಯಾಪಿಸಿದೆ. ಅಪಘಾತದಲ್ಲಿ ಹಳೆ ವಸ್ತುಗಳು ಸುಟ್ಟು ಕರಕಲಾಗಿವೆ.
ಇದನ್ನೂ ಓದಿ : ಉಕ್ರೇನ್ನಲ್ಲಿ ಸಿಲುಕಿಕೊಂಡ ಬಾಗಲಕೋಟೆಯ ಇಬ್ಬರು MBBS ವಿದ್ಯಾರ್ಥಿಗಳು
ಅಗ್ನಿಶಾಮಕ ದಳದ ಅಧಿಕಾರಿಗಳು ಗೋಡೌನ್ನ ಹತ್ತಿರದ ಸ್ಥಳಗಳಿಂದ ಎಲ್ಲರಿಗೂ ಹೊರಹೋಗುವಂತೆ ಎಚ್ಚರಿಕೆ ನೀಡಿದ್ದಾರೆ. 10 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಿಯಂತ್ರಿಸುವ ಕಾರ್ಯ ನಡೆದಿದೆ. ಈ ಅವಘಡದಲ್ಲಿ ಸುಮಾರು 60 ಲಕ್ಷ ರೂಪಾಯಿ ಸ್ವತ್ತುಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.