ಮುಂಬೈ: ಭಾರತವನ್ನು ಕೋವಿಡ್ ಖೆಡ್ಡಾಕ್ಕೆ ಕೆಡವಿರುವ ಮಹಾರಾಷ್ಟ್ರದಲ್ಲಿ ದಿನ ದಿನಕ್ಕೂ ಪಾಸಿಟಿವ್ ಕೇಸ್ಗಳು ಹೆಚ್ಚುತ್ತಲೇ ಇವೆ. ಈ ನಡುವೆ ಅಲ್ಲಿನ ಸರ್ಕಾರ 18 ರಿಂದ 44 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಿದೆ. ಈ ಸಂಬಂಧ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಮೇ 1 ರಿಂದ 18- 44 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ಹಾಕಲಾಗುವುದು. ಆದರೆ, ಕೇಂದ್ರ ಸರ್ಕಾರ ಎಲ್ಲರಿಗೂ ಉಚಿತ ಲಸಿಕೆ ಹಾಕುವ ನಿರ್ಧಾರ ತೆಗೆದುಕೊಳ್ಳುತ್ತಾ ಎಂಬುದೇ ಎಲ್ಲರ ಮುಂದಿರುವ ಪ್ರಶ್ನೆ ಎಂದಿರುವ ಪವಾರ್, ಈ ಸಂಬಂಧ ನಾಳೆ ನಡೆಯಲಿರುವ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದಿದ್ದಾರೆ.
ಕೇಂದ್ರ ಸರ್ಕಾರ ರೆಮ್ಡೆಸಿವಿರ್ ಪೂರೈಕೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಲಸಿಕೆ ಕೊರತೆ ಇದ್ದು, ಕೇಂದ್ರದ ಜೊತೆ ಮಹಾ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಕೇಂದ್ರದಿಂದ ಲಸಿಕೆ ಪೂರೈಕೆ ಕಡಿಮೆ ಇದ್ದು, ರಾಜ್ಯದಲ್ಲಿ ರೆಮ್ಡೆಸಿವಿರ್ ಲಸಿಕೆ ಕೊರತೆ ಎದುರಾಗಿದೆ. ಹೀಗಾಗಿ, ಈ ನಡುವೆ ಮಹಾ ಸರ್ಕಾರ 8-10 ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳುವ ಮಾತುಕತೆ ನಡೆಸುತ್ತಿದೆ ಎಂಬ ಸುಳಿವನ್ನೂ ಪವಾರ್ ನೀಡಿದ್ದಾರೆ. ಆದರೆ, ಲಸಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ ಸಿಗಬೇಕು ಎನ್ನುವ ಮೂಲಕ ಸಮಸ್ಯೆಯನ್ನ ಮೋದಿ ಸರ್ಕಾರದ ಅಂಗಳಕ್ಕೆ ಎಸೆದಿದ್ದಾರೆ.