ನವದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಉನ್ನತಮಟ್ಟದ ಸಭೆ ನಡೆಯಿತು.
ಸಭೆಯಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಹಾಗೂ ಅಂತಾರಾಜ್ಯ ಜಲ ವಿವಾದಗಳ ಕುರಿತ ಹಾಗೂ ಘನತೆವೆತ್ತ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆ ನಡೆಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಜನ ವ್ಯಾಜ್ಯದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಿಶೇಷವಾಗಿ ಕಾವೇರಿ ಕೊಳ್ಳದಲ್ಲಿ ನೀರು ಉಪಯೋಗ ಮಾಡುವ ಕುರಿತಾದ ಪ್ಲಾನ್ ಬಗ್ಗೆ ಚರ್ಚೆಯಾಗಿದೆ. ಆಂಧ್ರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಕುರಿತಂತೆ ಗಂಭೀರವಾಗಿ ಚರ್ಚಿಸಿ ಮುಂದಿನ ತೀರ್ಮಾನದ ಬಗ್ಗೆ ಮಾತನಾಡಲಾಗಿದೆ ಎಂದರು.
ಓದಿ: 'ಮಾ.4 ರವರೆಗೆ ವಿಧಾನಸೌಧದ ಎದುರು ಧರಣಿ, ನಂತರ ಉಪವಾಸ ಸತ್ಯಾಗ್ರಹ'
ತಮಿಳುನಾಡಿನಲ್ಲಿ ಶಂಕುಸ್ಥಾಪನೆಗೊಂಡ ಯೋಜನೆ ಕುರಿತಂತೆ ಪ್ರತಿಕ್ರಿಯಿಸಿ, ಆ ಯೋಜನೆಯಿಂದ ರಾಜ್ಯಕ್ಕೆ ಯಾವುದೇ ತೊಂದರೆ ಇಲ್ಲ. ಸಿಎಂ ನೇತೃತ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದ ಹಿತಕ್ಕಾಗಿ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಈ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸೀನಿಯರ್ ಅಡ್ವೋಕೇಟ್ ಮೋಹನ ಕಾತರಕಿ, ಅಡ್ವೋಕೇಟ್ ವಿ.ಎನ್.ರಘುಪತಿ, ನಿಶಾಂತ ಪಾಟೀಲ್, ರಾಜೇಶ್ವರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.