ಉನ್ನಾವೊ(ಉತ್ತರ ಪ್ರದೇಶ): ರಾಜ್ಯದಲ್ಲಿ ನಡೆಯುತ್ತಿರುವ ಕೊರೊನಾ ಕರ್ಫ್ಯೂವನ್ನು ಉಲ್ಲಂಘಿಸಿದ್ದಕ್ಕಾಗಿ 17 ವರ್ಷದ ಬಾಲಕನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಭಟ್ಪುರಿ ಗ್ರಾಮದಲ್ಲಿ ನಡೆದಿದೆ.
ಬಾಲಕ ತನ್ನ ಮನೆಯ ಹೊರಗೆ ತರಕಾರಿ ಮಾರುತ್ತಿದ್ದ. ಈ ವೇಳೆ ಕೊರೊನಾ ಕರ್ಫ್ಯೂ ಉಲ್ಲಂಘಿಸಿದ ಆರೋಪದ ಮೇಲೆ ಕಾನ್ಸ್ಟೇಬಲ್ ಹಿಡಿದು ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸ್ ಠಾಣೆಗೆ ಕರೆದೊಯ್ದು ಮತ್ತೆ ಬಾಲಕನ ಮೇಲೆ ಲಾಠಿಯಿಂದ ಮನಸೋಇಚ್ಛೆಯಿಂದ ಥಳಿಸಿದ್ದಾರೆ ಎನ್ನಲಾಗ್ತಿದೆ. ಈ ವೇಳೆ ಬಾಲಕ ಗಂಭೀರವಾಗಿ ಗಾಯಗೊಂಡು ಅಸ್ವಸ್ಥನಾಗಿದ್ದ. ಕೂಡಲೇ ಆತನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದ್ರೆ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು.
ಈ ಘಟನೆಗೆ ಪೊಲೀಸರೇ ಕಾರಣವೆಂದು ಬಾಲಕನ ಕುಟುಂಬಸ್ಥರು ಮತ್ತು ಗ್ರಾಮದ ಜನ ಆರೋಪಿಸಿ ಲಖನೌ ರಸ್ತೆ ಕ್ರಾಸಿಂಗ್ ಬಳಿ ಜಮಾಯಿಸಿ ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರಿ ಕೆಲಸ ಮತ್ತು ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಕಾನ್ಸ್ಟೇಬಲ್ ವಿಜಯ್ ಚೌಧರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಗೃಹರಕ್ಷಕ ಸತ್ಯಪ್ರಕಾಶ್ನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಮತ್ತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಕೊರೊನಾ ಪ್ರಕರಣಗಳು ಹರಡುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ಮೇ 24 ರ ಬೆಳಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ವಿಧಿಸಿದೆ.
ಓದಿ: ಪಾತಾಳಕ್ಕೆ ಕುಸಿದ ಬೆಲೆ.. 10 ಎಕರೆಯುಲ್ಲಿನ ಟೊಮೆಟೊ ಬೆಳೆಗೆ ಬೆಂಕಿ ಹಚ್ಚಿದ ರೈತ