ನವದೆಹಲಿ: ಕೋವಿಡ್ ಹಾಗೂ ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗುವವರೆಗೂ ವಿಚಾರಣೆಯನ್ನು ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮನವಿ ಮಾಡಿದ್ದಾರೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಸೋನಿಯಾ ಜೂನ್ 12 ರಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೂನ್ 20 ರಂದು ಡಿಸ್ಚಾರ್ಜ್ ಆಗಿದ್ದರು. ಆದರೆ ಕೋವಿಡೋತ್ತರ ಅನಾರೋಗ್ಯ ಅವರಿಗೆ ಉಂಟಾಗಿತ್ತು. ಮೂಗಿನಿಂದ ರಕ್ತಸ್ರಾವವಾಗಿದ್ದು, ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು ಎನ್ನಲಾಗಿದೆ.
ಸೋನಿಯಾರಿಗೆ ವೈದ್ಯರು ಕಟ್ಟುನಿಟ್ಟಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ವಿಚಾರಣೆಯನ್ನು ಕೆಲವು ವಾರಗಳ ಕಾಲ ಮುಂದೂಡುವಂತೆ ಇಡಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಟ್ವೀಟ್ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿತ್ತು.