ನವದೆಹಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಜಾರಿ ಕುರಿತಂತೆ ಮಹತ್ತರ ಬೆಳಗಣಿಗೆಗಳು ನಡೆಯುತ್ತಿವೆ. ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಯುಸಿಸಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು, ಇದರ ಬೆನ್ನಲ್ಲೇ ಈ ಕುರಿತ ಚರ್ಚೆಗೆ ಉನ್ನತ ಮಟ್ಟದ ಸಂಸದೀಯ ಸ್ಥಾಯಿ ಸಮಿತಿಯು ಇಂದು (ಸೋಮವಾರ) ಸಭೆ ಕರೆದಿದೆ.
ರಾಜ್ಯಸಭಾ ಸಂಸದ ಸುಶೀಲ್ ಮೋದಿ ನೇತೃತ್ವದಲ್ಲಿ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ ರಾಜ್ಯಸಭಾ ಸಂಸದೀಯ ಸ್ಥಾಯಿ ಸಮಿತಿಯು ಮಧ್ಯಾಹ್ನ 3 ಗಂಟೆಗೆ ಕಾನೂನು ಕುರಿತು ಚರ್ಚಿಸಲಿದೆ. ಸಮಿತಿಯು ಈ ವಿಷಯದ ಬಗ್ಗೆ ಮಧ್ಯಸ್ಥಗಾರರ ಅಭಿಪ್ರಾಯಗಳನ್ನು ಪಡೆಯಲಿದೆ ಎಂದು ಸುಶೀಲ್ ಮೋದಿ ಈ ಹಿಂದೆ ತಿಳಿಸಿದ್ದರು. ಕಾನೂನು ವ್ಯವಹಾರಗಳ ಇಲಾಖೆ, ಶಾಸಕಾಂಗ ಇಲಾಖೆ ಹಾಗೂ ಭಾರತೀಯ ಕಾನೂನು ಆಯೋಗದ ಪ್ರತಿನಿಧಿಗಳನ್ನೂ ಸಭೆಗೆ ಆಹ್ವಾನಿಸಲಾಗಿದೆ.
ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹ: ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ ಕಾನೂನು ಆಯೋಗ ಜನರಿಂದ ಸಲಹೆ, ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದೆ. ಜೂನ್ 14ರಿಂದ ಇದಕ್ಕೆ ಅವಕಾಶ ನೀಡಲಾಗಿದ್ದು, ಅಭಿಪ್ರಾಯ ತಿಳಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ. ಇದಕ್ಕೆ ಜನರಿಂದ ಭರ್ಜರಿ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಕೇವಲ 15 ದಿನದಲ್ಲಿ 8.5 ಲಕ್ಷದಷ್ಟು ಸಲಹೆಗಳು ಕಾನೂನು ಆಯೋಗಕ್ಕೆ ಹರಿದು ಬಂದಿವೆ ಎಂದು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮಾಹಿತಿ ನೀಡಿದ್ದರು.
ಯುಸಿಸಿ ಬಗ್ಗೆ ಪಿಎಂ ಮೋದಿ ಮಾತು: ಮಧ್ಯಪ್ರದೇಶದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಒಂದು ದೇಶದಲ್ಲಿ ಎರಡು ಕಾನೂನುಗಳು ಕಾರ್ಯನಿರ್ವಹಿಸುವುದು ತರವಲ್ಲ. ದೇಶವೆಂಬುದು ಒಂದು ಕುಟುಂಬ. ಅದರಲ್ಲಿ ಒಬ್ಬರಿಗೆ ಒಂದು ಕಾನೂನು, ಉಳಿದವರಿಗೆ ಇನ್ನೊಂದು ಕಾನೂನು ಅನ್ವಯಿಸಲು ಸಾಧ್ಯವಿಲ್ಲ. ವಿಪಕ್ಷಗಳು ಮುಸ್ಲಿಮರನ್ನು ಬೇಕಂತಲೇ ಎತ್ತಿಕಟ್ಟುತ್ತಿವೆ. ಎರಡೆರಡು ಕಾನೂನುಗಳನ್ನು ಇಟ್ಟುಕೊಂಡು ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಈ ಮೂಲಕ ಏಕರೂಪ ನಾಗರಿಕ ಸಂಹಿತೆ ಜಾರಿ ಖಚಿತ ಎಂಬ ಸುಳಿವು ನೀಡಿದ್ದರು.
ಏನಿದು ಯುಸಿಸಿ?: ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ದೇಶದ ಎಲ್ಲ ಜನರಿಗೆ ಅನ್ವಯಿಸುವ ಕಾನೂನಾಗಿದೆ. ಪ್ರಸ್ತುತ ದೇಶದಲ್ಲಿ ವಿವಿಧ ಧರ್ಮಗಳು ವಿವಾಹ, ವಿಚ್ಛೇದನ, ಉತ್ತರದಾಯಿತ್ವ, ಆಸ್ತಿ ಹಕ್ಕು ಮೊದಲಾದ ವಿಚಾರಗಳಲ್ಲಿ ತಮ್ಮದೇ ಆದ ಪ್ರತ್ಯೇಕ ವೈಯಕ್ತಿಕ ಕಾನೂನು ಹೊಂದಿವೆ. ಇವು ಎಲ್ಲರಿಗೂ ಸಮಾನ ಹಕ್ಕು ಕಲ್ಪಿಸಿಲ್ಲ. ಹೀಗಾಗಿ ಇದನ್ನು ತೊಡೆದು ಹಾಕಿ ದೇಶದಲ್ಲಿ ಎಲ್ಲ ಜಾತಿ, ಧರ್ಮದವರನ್ನು ಒಂದೇ ಕಾನೂನಿನಡಿ ತರುವ ಪ್ರಯತ್ನವಾಗಿದೆ.
ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಧಾನಿ ಮೋದಿ ಮಾತು; ತಡರಾತ್ರಿ ಸಭೆ ನಡೆಸಿದ ಮುಸ್ಲಿಂ ಕಾನೂನು ಮಂಡಳಿ