ಮುಂಬೈ: ವಿಧಾನಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಟಿಎಂಸಿ ಹಾಗೂ ತಮಿಳುನಾಡಿನ ಡಿಎಂಕೆ ಪಕ್ಷಕ್ಕೆ ಚುನಾವಣಾ ತಂತ್ರಗಾರನಾಗಿ ಕಾರ್ಯ ನಿರ್ವಹಿಸಿದ್ದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಇದೀಗ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಇವರ ಈ ಭೇಟಿಯು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ್ದು, ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ಮಹಾರಾಷ್ಟ್ರದ ಮುಂಬೈನಲ್ಲಿರುವ ಪವಾರ್ ನಿವಾಸದಲ್ಲಿ ಕಿಶೋರ್ ಭೇಟಿಯಾಗಿದ್ದು, ಇಬ್ಬರೂ ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ಆದರೆ, ಇವರಿಬ್ಬರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನಡೆಸಿಲ್ಲ.
ಇದನ್ನೂ ಓದಿ: 'ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಿದ್ರೆ ಬೂಟ್ ಹಾಕುವುದಿಲ್ಲ' ನಿಜವಾಯ್ತು ಪ್ರಶಾಂತ್ ಕಿಶೋರ್ ಭವಿಷ್ಯ!
2019ರಲ್ಲಿ ಇಂದಿನ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿದ್ದರು. ಬಳಿಕ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಇತ್ತೀಚೆಗೆ ತಮಿಳುನಾಡು ಮತ್ತು ಬಂಗಾಳದಲ್ಲಿ ಚುನಾವಣಾ ಕಾರ್ಯತಂತ್ರವನ್ನು ರೂಪಿಸಲು ಸಹಾಯ ಮಾಡಿದ್ದ ಕಿಶೋರ್, ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಹಾಗೂ ಡಿಎಂಕೆ ಜಯ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚುನಾವಣಾ ಫಲಿತಾಂಶದ ಬಳಿಕ ಇವರು ತಾವು ಇನ್ಮುಂದೆ ಚುನಾವಣಾ ತಂತ್ರಗಾರನಾಗಿ ಮುಂದುವರೆಯುವುದಿಲ್ಲ ಎಂದು ಹೇಳಿದ್ದರು. ಆದರೆ ಇಂದು ಶರದ್ ಪವಾರ್ರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.