ನವದೆಹಲಿ : ಸೆಂಟ್ರಲ್ ವಿಸ್ತಾ ನಿರ್ಮಾಣ ಯೋಜನೆ ಸ್ಥಗಿತಗೊಳಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠ, ‘ಅರ್ಜಿದಾರರು ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಇತರೆ ಸಾರ್ವತ್ರಿಕ ಯೋಜನೆಗಳ ಕುರಿತು ಅಧ್ಯಯನ ನಡೆಸದೇ, ಕೇವಲ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಮಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಪ್ರಕರಣದ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ಪಿಐಎಲ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಇದೊಂದು ಪ್ರಚೋದಿತ ಅರ್ಜಿಯಾಗಿದ್ದು, ಇದರಲ್ಲಿ ವಿಶ್ವಾಸಾರ್ಹ ಮಾಹಿತಿಯ ಕೊರತೆ ಇದೆ‘ ಎಂದು ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯ ಒಪ್ಪಬಹುದಾಗಿದೆ ಎಂದು ನ್ಯಾಯಪೀಠ ಹೇಳಿದೆ. ಪಿಐಎಲ್ ಸಲ್ಲಿಸಿರುವ ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿರುವ ಹೈಕೋರ್ಟ್ ಆದೇಶದ ವಿರುದ್ಧವೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಈ ಅರ್ಜಿಯ ವಿಚಾರಣೆಯ ಸಮಯದಲ್ಲಿ ‘ಇದು ನಿಮ್ಮ ನಡವಳಿಕೆಯಾಗಿದ್ದರೆ, ₹1 ಲಕ್ಷ ದಂಡ ವಿಧಿಸಿರುವುದೂ ಕಡಿಮೆಯೇ ಎಂದು ಹೇಳಿದ ನ್ಯಾಯಪೀಠ, ‘ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣ ಅನುಸರಿಸುತ್ತಾ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ, ಈ ಪ್ರಕರಣದ ವಿಚಾರಣೆಯನ್ನೇಕೆ ಮುಂದುವರಿಸಲು ಬಯಸಿದ್ದೀರಿ‘ ಎಂದು ಪ್ರಶ್ನಿಸಿದೆ. ಅಲ್ಲದೇ ಪ್ರಶ್ನಾರ್ಹ PILಗಳು ವ್ಯವಸ್ಥೆಗೆ ಸಮಸ್ಯೆಯನ್ನು ಉಂಟುಮಾಡುತ್ತವೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇದನ್ನೂ ಓದಿ:ಸೆಂಟ್ರಲ್ ವಿಸ್ತಾ ಕಾಮಗಾರಿ ರದ್ದತಿ ಕೋರಿದ್ದ ಅರ್ಜಿದಾರನಿಗೆ 1 ಲಕ್ಷ ರೂ. ದಂಡ