ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಂಜಾಬ್ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟನ್ನು ಪರಿಹರಿಸುವ ತಮ್ಮ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಶಾಸಕರು, ಸಂಸದರು ಮತ್ತು ಪ್ರಮುಖ ರಾಜಕೀಯ ಮುಖಂಡರ ಜೊತೆ ತಮ್ಮ ನಿವಾಸದಲ್ಲಿ ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ.
ಶುಕ್ರವಾರ ರಾಹುಲ್ ಗಾಂಧಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿಜೇಂದ್ರ ಸಿಂಗ್ಲಾ, ರಾಣಾ ಗುರ್ಜಿತ್ ಸಿಂಗ್, ಸಂಸದ ಶಂಷರ್ ಸಿಂಗ್ ಧಿಲ್ಲೋನ್ ಮತ್ತು ಶಾಸಕ ಲಖ್ವೀರ್ ಸಿಂಗ್ ಪಾಲ್ಗೊಂಡಿದ್ದರು. ಜೊತೆಗೆ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಪಂಜಾಬ್ನ ಕೆಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ರಾಜ್ಯಸಭಾ ಸಂಸದ ಶಂಶರ್ ಸಿಂಗ್ ಧಿಲ್ಲೋನ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಪಂಜಾಬ್ ಕಾಂಗ್ರೆಸ್ನಲ್ಲಿನ ಬೇಗುದಿಯನ್ನು ಪರಿಹರಿಸಲು ಈ ಸಭೆ ನಡೆಸಲಾಗಿದೆ ಮತ್ತು ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಲು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಬುಧವಾರ ಸಹ ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುನಿಲ್ ಜಖರ್, ಪಂಜಾಬ್ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ಮತ್ತು ದೆಹಲಿಯ ಹರೀಶ್ ರಾವತ್ ಸೇರಿದಂತೆ ಅನೇಕ ಹಿರಿಯ ಪಂಜಾಬ್ ಮುಖಂಡರನ್ನು ಭೇಟಿಯಾಗಿದ್ದರು. ಮೂಲಗಳ ಪ್ರಕಾರ ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಅವರನ್ನು ಶೀಘ್ರದಲ್ಲೇ ಸಮಿತಿ ಕರೆಸಿಕೊಳ್ಳಲಿದೆ.
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಇತ್ತೀಚೆಗೆ ಮೂರು ದಿನಗಳ ತಮ್ಮ ದೆಹಲಿ ಪ್ರವಾಸದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಲ್ಲ. ಪಕ್ಷದ ಪಂಜಾಬ್ ಘಟಕದಲ್ಲಿ ಉಂಟಾಗಿರುವ ಬಿರುಕು ಕೊನೆಗೊಳಿಸಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದರು.
ಮುಂದಿನ ವರ್ಷ ಪಂಜಾಬ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಪಂಜಾಬ್, ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿರುವ ಕೆಲವೇ ರಾಜ್ಯಗಳಲ್ಲಿ ಒಂದಾಗಿರುವ ಕಾರಣ ಈ ರಾಜ್ಯವು ಕಾಂಗ್ರೆಸ್ಸಿಗೆ ನಿರ್ಣಾಯಕವಾಗಿದೆ ಮತ್ತು ಫಲಿತಾಂಶವು ಪಕ್ಷದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಪಕ್ಷದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಲು ಕಾಂಗ್ರೆಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ:ಕೋಲ್ಕತ್ತಾದಲ್ಲಿ ನಕಲಿ ವ್ಯಾಕ್ಸಿನೇಷನ್ ಆರೋಪ: ಶೀಘ್ರ ತನಿಖೆಗೆ ಸುವೇಂದು ಅಧಿಕಾರಿ ಆಗ್ರಹ