ಮುಂಬೈ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ. ಜೂನ್ 15 ರ ಬುಧವಾರ ಪ್ರತಿಪಕ್ಷಗಳ ಸಭೆ ನಡೆದಿದ್ದು, ಈ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ಸರ್ವಸಮ್ಮತ ಅಭ್ಯರ್ಥಿಯನ್ನು ಅವಿರೋಧವಾಗಿ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡುವ ಕುರಿತು ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾಗೆ ಬಿಜೆಪಿ ಜವಾಬ್ದಾರಿ ವಹಿಸಿದೆ. ಈ ಹಿನ್ನೆಲೆ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಶರದ್ ಪವಾರ್ ಸೇರಿದಂತೆ ಇತರ ಪ್ರಮುಖ ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರಪತಿ ಚುನಾವಣೆ ಸಂಬಂಧ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಜೂನ್ 15 ರ ಬುಧವಾರ ಪ್ರತಿಪಕ್ಷಗಳ ನಾಯಕರ ಸಭೆ ನಡೆಸಿದ್ದರು. ಈ ವೇಳೆ, ಎನ್ಡಿಎ ಪಕ್ಷದ ಅಭ್ಯರ್ಥಿಯನ್ನ ರಾಷ್ಟ್ರಪತಿಯಾಗಿ ಆಯ್ಕೆ ಮಾಡುವ ಕುರಿತು ಚರ್ಚೆ ನಡೆದಿರುವುದರಿಂದ ಶಿವಸೇನೆಯು ಎನ್ಡಿಎ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಒತ್ತಾಯಿಸಿದೆ ಎನ್ನಲಾಗಿದೆ.
ಆದರೆ, ಈ ಸಭೆಯಿಂದ ಪ್ರಮುಖ ಪಕ್ಷಗಳಾದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ), ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಆಪ್), ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮತ್ತು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಹಾಗೂ ಪಂಜಾಬ್ನ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಪಕ್ಷಗಳು ಹೊರಗುಳಿದಿದ್ದವು.
ಜೂನ್ 21 ರಂದು ದೆಹಲಿಯಲ್ಲಿ ಮತ್ತೊಮ್ಮೆ ಆಪ್ ರಾಷ್ಟ್ರಪತಿ ಚುನಾವಣೆಯ ವಿಷಯವಾಗಿ ಪ್ರತಿಪಕ್ಷಗಳ ಸಭೆ ನಡೆಸಲಿದೆ. ಹೀಗಾಗಿ, 21 ರಂದು ನಡೆಯುವ ಸಭೆಯಲ್ಲಿ ಯಾರ ಹೆಸರಿಗೆ ಮುದ್ರೆ ಬೀಳಲಿದೆ ಎಂಬುದರತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮಮತಾ ಸಭೆಯಿಂದ ದೂರ ಉಳಿದ ಪ್ರತಿಪಕ್ಷಗಳ ಮೇಲೆ ಬಿಜೆಪಿ ಕಣ್ಣು