ನವದೆಹಲಿ : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಮ್ ಬಾಪು ಆಯುರ್ವೇದ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡಿ ಎಂದು ಸಲ್ಲಿಸಿದ್ದ ಮನವಿಯ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜೂನ್ 11ಕ್ಕೆ ಮುಂದೂಡಿದೆ.
ಉತ್ತರಾಖಂಡದ ಆಯುರ್ವೇದ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲು ಬಾಪು ಈ ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಅಜಯ್ ರಾಸ್ತೋಗಿ ಅವರ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ರಾಜಸ್ಥಾನ ಹೈಕೋರ್ಟ್ನ ಆದೇಶವನ್ನು ಅಸಾರಾಮ್ ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದರಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ತಾತ್ಕಾಲಿಕವಾಗಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಈ ಹಿಂದೆಯೂ ಕೂಡ ತನ್ನ ಕಾಯಿಲೆಗಳಿಗೆ ಅಲೋಪತಿ ಚಿಕಿತ್ಸೆಗಾಗಿ ಜಾಮೀನು ಕೋರಿದ್ದ ಅಸಾರಾಮ್ ಈಗ ಆಯುರ್ವೇದ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕೆಂದು ಮನವಿ ಮಾಡಿದ್ದಾರೆ.
ಮನವಿಯಲ್ಲಿ, ತನಗೆ 83-84 ವರ್ಷವಾಗಿದೆ. ವೈದ್ಯಕೀಯ ಸ್ಥಿತಿ ತೀವ್ರವಾಗಿದೆ ಮತ್ತು ತಕ್ಷಣದ ಸಮಗ್ರ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ಮನವಿ ಮಾಡಲಾಗಿದೆ. ಹಾಗೆಯೇ ವೈದ್ಯಕೀಯ ದಾಖಲೆಗಳನ್ನೂ ಸಲ್ಲಿಸಿದ್ದಾರೆ.
ಏನಿದು ಪ್ರಕರಣ : ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಅಸಾರಾಮ್ ಜೋಧ್ಪುರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. 2002ರ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಮೇ 5ರಂದು ಇವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.