ನವದೆಹಲಿ: ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವಿಳಂಬವಾಗುತ್ತಿರುವ ಕಾರಣ ಈಗಿನ ಪೀಠದ ಬದಲಾಗಿ ಮತ್ತೊಂದು ಪೀಠಕ್ಕೆ ಅರ್ಜಿಯನ್ನು ವರ್ಗಾಯಿಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಪೀಠದ ಜಡ್ಜ್ಗಳಲ್ಲಿ ಒಬ್ಬರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮಂಗಳವಾರ ತಿಳಿಸಿದರು.
ಅರ್ಜಿಗಳನ್ನು ಕೈಗೆತ್ತಿಕೊಳ್ಳಲು ದಿನಾಂಕ ನಿಗದಿ ಮಾಡುವ ವಿಷಯವಾಗಿ ನಡೆದ ಚರ್ಚೆಯಲ್ಲಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರು ಹಿಜಾಬ್ ಅರ್ಜಿಯನ್ನು ಪ್ರಸ್ತಾಪಿಸಿದರು. ಈ ವೇಳೆ ಸೂಚಿತ ಕೋರ್ಟ್ ಪೀಠದ ಒಬ್ಬ ಜಡ್ಜ್ ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಅರ್ಜಿಯನ್ನು ಅದೇ ಪೀಠದಿಂದ ವಿಚಾರಣೆ ನಡೆಸುವುದು ಕಷ್ಟ. ಹೊಸ ಪೀಠಕ್ಕೆ ನೀಡಲು ಯೋಜಿಸಲಾಗುವುದು ಎಂದು ಸಿಜೆಐ ತಿಳಿಸಿದರು. ಹಿಜಾಬ್ ಅರ್ಜಿಯ ವಿಚಾರಣೆಯನ್ನು ಜುಲೈನಲ್ಲಿ ಪಟ್ಟಿ ಮಾಡಲಾಗುವುದು ಎಂದು ಸಿಜೆಐ ಈ ಹಿಂದೆ ತಿಳಿಸಿದ್ದರು.
ಪ್ರಕರಣವೇನು?: ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಕಾಲೇಜು ಕ್ಯಾಂಪಸ್ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಅಧಿಕಾರ ನೀಡುವ ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು.
ಈ ಮೂಲಕ ಆಯಾ ಶಾಲಾ ಸಂಸ್ಥೆಗಳಲ್ಲಿ ಹಿಜಾಬ್ ಬೇಕೇ ಬೇಡವೇ ಎಂಬ ನಿರ್ಧಾರವನ್ನು ಅಭಿವೃದ್ಧಿ ಸಮಿತಿಗಳೇ ನಿರ್ಧರಿಸಬಹುದು ಎಂದು ತೀರ್ಪು ನೀಡಿತ್ತು. ಇದು ಮುಸ್ಲಿಂ ಸಮುದಾಯದ ವಿರುದ್ಧದ ತೀರ್ಪು ಎಂದು ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಅಲ್ಲದೇ ಕೋರ್ಟ್ ತೀರ್ಪಿನ ವಿರುದ್ಧವೇ ಮುಸ್ಲಿಂ ಸಮುದಾಯ ಪ್ರತಿಭಟಿಸಿತ್ತು.