ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆಯನ್ನ ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತಿಷ್ಠೆಯಾಗಿ ಸ್ವೀಕರಿಸಿವೆ. ಈ ಮಧ್ಯೆ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಸ್ಥಳೀಯ ನಾಯಕರಿಗೆ ಹೋಟೆಲ್ ಒಂದರಲ್ಲಿ ಹಣ ಹಂಚುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಷ್ಟೇ ಅಲ್ಲ ಈ ಬಗ್ಗೆ ಚುನಾವಣೆ ಆಯೋಗಕ್ಕೆ ಪತ್ರವನ್ನೂ ಬರೆದಿದೆ.
ಪತ್ರದಲ್ಲಿ ಏನಿದೆ?
ಸಚಿವ ಡಿ.ಕೆ ಶಿವಕುಮಾರ್ ಮತದಾರರು ಮತ್ತು ಸ್ಥಳೀಯ ನಾಯಕರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.
ಪ್ರಸ್ತುತ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣ ಎದುರಿಗಿರುವ ಕಾಟನ್ ಕಂಟ್ರಿ ಹೋಟೆಲ್ನಲ್ಲಿ ತಂಗಿದ್ದಾರೆ. ಇಲ್ಲಿಂದಲೇ ಕುಂದಗೋಳದ ಮತದಾರರು ಹಾಗೂ ಅಲ್ಲಿನ ನಾಯಕರಿಗೆ ಹಣದ ಹಂಚಿಕೆ ಮಾಡುತ್ತಿದ್ದಾರೆ. ಇದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಪತ್ರ ಆರೋಪಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.