ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮಂಗಳವಾರ ಅ. 27ರಂದು) ಬೆಳಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರಪ್ರದೇಶದ ಪಿಎಂ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿಗಳೂ ಸಹ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ತುತ್ತಾಗಿರುವ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಚಟುವಟಿಕೆಗಳನ್ನು ಪುನಾರಂಭಿಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯನ್ನು 2020ರ ಜೂನ್ 1ರಂದು ಆರಂಭಿಸಲಾಯಿತು.
ಈವರೆಗೆ ಈ ಯೋಜನೆಯಡಿ ಒಟ್ಟು 24 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. 12 ಲಕ್ಷಕ್ಕೂ ಅಧಿಕ ಅರ್ಜಿಗಳಿಗೆ ಸಾಲವನ್ನು ಅನುಮೋದಿಸಲಾಗಿದೆ. 5.35 ಲಕ್ಷ ಸಾಲಗಳನ್ನು ಈಗಾಗಲೇ ವಿತರಿಸಲಾಗಿದೆ. ಉತ್ತರ ಪ್ರದೇಶ ರಾಜ್ಯವೊಂದರಲ್ಲೇ 6 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದು, ಆ ಪೈಕಿ 3.27 ಲಕ್ಷ ಅರ್ಜಿಗಳಲ್ಲಿ ಸಾಲ ಅನುಮೋದಿಸಲಾಗಿದೆ ಮತ್ತು 1.87 ಲಕ್ಷ ಸಾಲಗಳನ್ನು ವಿತರಣೆ ಮಾಡಲಾಗಿದೆ.
ಉತ್ತರ ಪ್ರದೇಶ ರಾಜ್ಯಾದ್ಯಂತ ಎಲ್ಲ ಫಲಾನುಭವಿಗಳು ಸಂವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಆ ಸಂವಾದ ಕಾರ್ಯಕ್ರಮವನ್ನು ಡಿಡಿ ನ್ಯೂಸ್ ನೇರ ಪ್ರಸಾರ ಮಾಡಲಿದೆ.