ಬೆಳಗಾವಿ: ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದ್ದು, ಸೋಂಕು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಹೀಗಾಗಿ, ಸೋಮವಾರದಿಂದ ಮೇ 4ರವರೆಗೆ ಸ್ವಯಂ ಪ್ರೇರಿತರಾಗಿ ಮಧ್ಯಾಹ್ನ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಿ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವ್ಯಾಪಾರಸ್ಥರಿಗೆ ಮನವಿ ಮಾಡಿದ್ದಾರೆ.
ಗೋಕಾಕ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಮಹಾಮಾರಿ ಗೋಕಾಕ್ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದೆ. ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಸೋಂಕು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಇದಕ್ಕಾಗಿಯೇ ತಹಶೀಲ್ದಾರ್ ಮತ್ತು ಡಿವೈಎಸ್ಪಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ ಎಂದರು.
ಮಾರುಕಟ್ಟೆಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ತರಬೇಕಿದೆ. ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಕೆಲವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಆದ್ದರಿಂದ ಏಪ್ರಿಲ್ 26 ರಿಂದ ಮೇ 4ರವರೆಗೆ ಉಭಯ ತಾಲೂಕುಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಅಗತ್ಯ ವಸ್ತುಗಳು, ಅಂಗಡಿ ಮುಂಗಟ್ಟುಗಳನ್ನು ತೆರೆಯಬೇಕು. 1 ಗಂಟೆಯ ನಂತರ ಕಡ್ಡಾಯವಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ತಾಲೂಕು ಆಡಳಿತಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು. ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಜೀವಕ್ಕೆ ಅಪಾಯವಾಗಬಹುದು. ಕೊರೊನಾ ಚೈನ್ ಬ್ರೇಕ್ ಮಾಡುವುದೇ ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು.
ಓದಿ: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್ವಿ ರಮಣ ಇಂದು ಪದಗ್ರಹಣ