ಚಿಕ್ಕೋಡಿ: ಕಳೆದೆರಡು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ, ನಿಪ್ಪಾಣಿ ನದಿ ತೀರದ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನದಿ ತೀರದ ಗ್ರಾಮಗಳಿಗೆ ಶಶಿಕಲಾ ಜೊಲ್ಲೆ ಭೇಟಿ ನಿಪ್ಪಾಣಿ ತಾಲೂಕಿನ ಹುನ್ನರಗಿ ನದಿ ತೀರಕ್ಕೆ ಹಾಗೂ ನೆರೆಹಾವಳಿ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಗ್ರಾಮಗಳ ಮುಳುಗಡೆ ಭೀತಿ, ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರ ಹಾಗೂ ಗ್ರಾಮಸ್ಥರ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಸಚಿವೆ ಶಶಿಕಲಾ ಜೊಲ್ಲೆ ತವರು ಮನೆ ಇರುವ ಭೀವಶಿ ಗ್ರಾಮವನ್ನು ಕೂಡ ನದಿ ನೀರು ಸುತ್ತುವರೆದಿದೆ.
ಕೃಷ್ಣಾ, ವೇದಗಂಗಾ, ದೂಧಗಂಗಾ ನದಿ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದು ನದಿ ತೀರದ ಗ್ರಾಮಗಳ ಜನರಿಗೆ ಮತ್ತಷ್ಟು ಆತಂಕ ಶುರುವಾಗಿದೆ. ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಚಿಕ್ಕೋಡಿ ಎಸಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದರು.