ಬಳ್ಳಾರಿ: ಜಿಲ್ಲೆಯ ಡಿಹೆಚ್ಒ ಕಚೇರಿ ಆವರಣದಲ್ಲಿಂದು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಪವನಕುಮಾರ ಮಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಎಡಿಸಿ ಮಂಜುನಾಥ, ಎಸಿ ರಮೇಶ ಕೋನರೆಡ್ಡಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಚಂದ್ರಶೇಖರ ಗುಡಿ ಸೇರಿದಂತೆ ಇತರ ಅಧಿಕಾರಿಗಳು ಲಸಿಕೆ ಪಡೆದರು.
ಡಿಸಿ ಪವನಕುಮಾರ ಮಲಪಾಟಿ ಮಾತನಾಡಿ, ಕೋವಿಶೀಲ್ಡ್ ಲಸಿಕೆ ಪಡೆಯುವ ಮುನ್ನ ನನಗೆ ಯಾವುದೇ ರೀತಿಯ ಭಯ ಇರಲಿಲ್ಲ. ಕಂದಾಯ ಮತ್ತು ಪೊಲೀಸ್ ಇಲಾಖೆಯ 9 ಸಾವಿರ ಸಿಬ್ಬಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಲಸಿಕೆ ಹಾಕಲಾಗುವುದು. ಪ್ರತಿಯೊಬ್ಬರು ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಎಸ್ಪಿ ಸೈದುಲು ಅಡಾವತ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಅಂದಾಜು 2,800 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹಂತ ಹಂತವಾಗಿ ಕೋವಿಶೀಲ್ಡ್ ಲಸಿಕೆಯನ್ನು ಹಾಕಲಾಗುವುದು ಎಂದರು. ಈ ವೇಳೆ, ಡಿಹೆಚ್ಒ ಡಾ. ಹೆಚ್.ಎಲ್.ಜನಾರ್ದನ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಡಾ.ಅನಿಲ್, ಡಾ.ಈಶ್ವರ ದಾಸಪ್ಪನವರ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.