ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕ ಮುನ್ನಡೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಷ್ಟ್ರೀಯ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಕಂಡಿದ್ದ ರಾಷ್ಟ್ರೀಯ ಕಾಂಗ್ರೆಸ್ಗೆ ಪಕ್ಷಕ್ಕೆ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಫಲಿತಾಂಶ ಹೊಸ ಶಕ್ತಿ ನೀಡಿದೆ. ಕಷ್ಟಕಾಲದಲ್ಲಿ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಿ ಉತ್ತೇಜಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ಧತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ ಎಂದು ಕೂಡ ಹೇಳಿದ್ದಾರೆ.