ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಆರಂಭ ಮತ್ತು ವಿದ್ಯಾಗಮ ಕಾರ್ಯಕ್ರಮಗಳ ವಿಸ್ತರಣೆ ಕುರಿತು ಶಿಕ್ಷಣ ಸಚಿವರು ಹಾಗೂ ಆರೋಗ್ಯ ಸಚಿವರ ಅಧ್ಯಕ್ಷತೆಯ ಸಭೆಯಲ್ಲಿ, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ತೀರ್ಮಾನದಂತೆ 9ನೇ ತರಗತಿಯಿಂದ 12ನೇ ತರಗತಿಯವರೆಗೆ ಪ್ರತಿದಿನ ಪೂರ್ಣಾವಧಿ ಶಾಲೆಯನ್ನು ನಡೆಸಲು ಹಾಗೂ 6-8ನೇ ತರಗತಿಯವರೆಗೆ ವಿದ್ಯಗಾಮ ಕಾರ್ಯಕ್ರಮ ಮುಂದುವರೆಸುವಂತೆ ತೀರ್ಮಾನಿಸಲಾಗಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಅನುದಾನಿತ-ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 11 ಮತ್ತು 12ನೇ ತರಗತಿಗಳನ್ನು ಫೆಬ್ರವರಿ ಒಂದರಿಂದ ಪೂರ್ಣಾವಧಿ ನಡೆಸಲು ತಿಳಿಸಿದೆ.
ಇನ್ನು ವಿದ್ಯಾರ್ಥಿಗಳು ಮನೆಯಿಂದಲೇ ಮಧ್ಯಾಹ್ನದ ಊಟ, ಉಪಹಾರ ತರುವಂತೆ ಸೂಚನೆ ನೀಡಲಾಗಿದೆ. ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ.
ಅನುಮತಿ ಪತ್ರದಲ್ಲಿ ಮಗುವಿಗೆ ಯಾವುದೇ ಕೋವಿಡ್ ಸೋಂಕಿನ ಲಕ್ಷಣಗಳಿರುವುದಿಲ್ಲವೆಂಬುದನ್ನ ದೃಢೀಕರಿಸಬೇಕು. ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ಲೈನ್ ಇಲ್ಲವೆ ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದು ಸೂಚನೆ ನೀಡಿದೆ.