ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ದೇಶವ್ಯಾಪಿ ಮುಷ್ಕರ ಸೋಮವಾರ ಆರಂಭವಾಗಿದ್ದು, ಇಂದೂ ಕೂಡ ರಾಜ್ಯದ ವಿವಿಧೆಡೆ ಬ್ಯಾಂಕಿಂಗ್ ಮತ್ತು ಸಾರಿಗೆ ಸೇವೆಗಳು ಭಾಗಶಃ ಸ್ಥಗಿತಗೊಂಡಿದ್ದವು.
ಮುಷ್ಕರಕ್ಕೆ ಐಎನ್ಟಿಯುಸಿ, ಎಐಟಿಯುಸಿ, ಹೆಚ್ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್ಇಡಬ್ಲ್ಯುಎ, ಎಐಸಿಸಿಟಿಯು, ಎಲ್ಪಿಎಫ್ ಮತ್ತು ಯುಟಿಯುಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದವು. ದೇಶದಾದ್ಯಂತ ಒಟ್ಟು 20 ಕೋಟಿಗೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಒಕ್ಕೂಟ ಹೇಳಿದೆ. ದೇಶವ್ಯಾಪಿ ಕರೆ ನೀಡಿರುವ ಮುಷ್ಕರ ಬೆಂಬಲಿಸಿ ನಗರದಲ್ಲಿ ಹಲವು ಕಡೆ ಪ್ರತಿಭಟನೆಗಳು ನಡೆದವು.
ನಗರದ ಹಲವೆಡೆ ಪ್ರತಿಭಟನೆ: ಕೇಂದ್ರ ಸರ್ಕಾರದ ಕಾರ್ಮಿಕ ರೈತ ವಿರೋಧಿ ಧೋರಣೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತ, ಕೆನರಾ ಬ್ಯಾಂಕ್ ಮುಖ್ಯ ಕಚೇರಿ, ಜೆ.ಸಿ.ರಸ್ತೆಯಲ್ಲಿರುವ ಎಲ್ಐಸಿ ಕಚೇರಿ, ಫ್ರೀಡಂ ಪಾರ್ಕ್ನಲ್ಲಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಘೋಷಣಾ ಫಲಕಗಳನ್ನು ಪ್ರದರ್ಶಿಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ವಿಮಾ ಕ್ಷೇತ್ರದಲ್ಲಿ ಜನರ ವಿಶ್ವಾಸ ಗಳಿಸಿರುವ ಎಲ್ಐಸಿ ಖಾಸಗೀಕರಣ ಮಾಡಬಾರದು. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್ಪಿಎಸ್) ರದ್ದುಪಡಿಸಬೇಕು. ಕಾರ್ಮಿಕ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.
ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟವು ಮುಷ್ಕರಕ್ಕೆ ಬೆಂಬಲ ನೀಡಿದ್ದು, ನಗರದ ಬ್ಯಾಂಕ್ಗಳ ನೌಕರರು ಕೆಲಸಕ್ಕೆ ಗೈರಾಗಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು ಮಾತ್ರ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರಿಂದ ಬ್ಯಾಂಕ್ ಕೆಲಸದಲ್ಲಿ ವ್ಯತ್ಯಯ ಉಂಟಾಗಿದೆ.