ಬೆಂಗಳೂರು: ಕೊರೊನಾ ವೈರಸ್ ಮಹಾಮಾರಿ ನಿಯಂತ್ರಣಕ್ಕಾಗಿ ರಾಷ್ಟ್ರಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಹಾಗಾಗಿ ಡಾ ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನ ಸರಳವಾಗಿ ವಿಧಾನಸೌಧದ ಮುಂಭಾಗದಲ್ಲಿ ಆಚರಣೆ ಮಾಡಯಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಸಿಎಂ ಯಡಿಯೂರಪ್ಪ, ದೇಶಾದ್ಯಂತ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಬಹುಮುಖಿ ಸಾಮರ್ಥ್ಯದ ಅಸಾಧಾರಣ ವ್ಯಕ್ತಿತ್ವ ಉಳ್ಳವರು. ಶ್ರೇಷ್ಠ ಆರ್ಥಿಕ ತಜ್ಞ, ಸಾಮಾಜಿಕ ಪರಿವರ್ತಕ. ಅವರು ಜನಸಮುದಾಯಗಳ ವಿಮೋಚಕರಾಗಿದ್ದರು ಎಂದು ಬಣ್ಣಿಸಿದರು.
ಅಂಬೇಡ್ಕರ್ ಚಿಂತನೆ ಎಲ್ಲಾ ಬಗೆಯ ತಾರತಮ್ಯ ಹೋಗಲಾಡಿಸುವುದು. ಜಾತ್ಯಾತೀತ ಭಾರತ ನಿರ್ಮಾಣ ಅವರ ಕನಸಾಗಿತ್ತು. ಎಲ್ಲಾ ಚಳುವಳಿಗಳಿಗೆ ಅಂಬೇಡ್ಕರ್ ಚಿಂತನೆ ಬಳುವಳಿಯಾಗಿದೆ. ಭಾರತದ ಸಂವಿಧಾನವನ್ನು ಇತರ ದೇಶಗಳು ಅನುಕರಿಸುತ್ತಿವೆ. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಬೇಕು. ಅವರ ಬಗ್ಗೆ ಮತ್ತಷ್ಟು ಅಧ್ಯಯನ ಆಗಬೇಕಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಯಾವುದಾದರೂ ಮೂರ್ತಿಗಳನ್ನು ಗಲ್ಲಿ ಗಲ್ಲಿಗಳಲ್ಲಿ ಪೂಜೆ ಮಾಡಲಾಗುತ್ತಿದೆ ಎಂದರೆ ಅದು ಅಂಬೇಡ್ಕರ್ ಅವರ ಪ್ರತಿಮೆ. ಅವರ ಮಾರ್ಗದರ್ಶನ, ಸ್ಫೂರ್ತಿ ಮುಂದಿನ ಪೀಳಿಗೆಗೆ ದಾರಿದೀಪ. ನಾವು ಇವತ್ತು ಅಂಬೇಡ್ಕರ್ ಜಯಂತಿಯನ್ನು ಕಚೇರಿಯಲ್ಲಿ ಆಚರಣೆ ಮಾಡುತ್ತಿಲ್ಲ. ಬದಲಾಗಿ ತಮ್ಮ ತಮ್ಮ ಜಾಗದಲ್ಲಿ ಸಂವಿಧಾನ ಪೀಠಿಕೆ ಓದುವಂತೆ ಕರೆ ಕೊಡಲಾಗಿದೆ. ಅಂಬೇಡ್ಕರ್ ಚಿಂತನೆಯೇ ನಮೆಗೆಲ್ಲಾ ದಾರಿದೀಪ. ಆ ನಂಬಿಕೆಯಲ್ಲೇ ನಾವು ಜೀವನ ನಡೆಸುತ್ತೇವೆ ಎಂದರು.