ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬರಮಾಡಿಕೊಳ್ಳುವ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ರಾಜ್ಯ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಒಂದು ದಿನದ ಪ್ರವಾಸಕ್ಕಾಗಿ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ಬರುವ ಮೊದಲೇ ಯಡಿಯೂರಪ್ಪರ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿರುವ ಬೊಮ್ಮಾಯಿ 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
![cm basavaraj bommai, former cm bs yeddyurappa](https://etvbharatimages.akamaized.net/etvbharat/prod-images/kn-bng-01-amith-shah-arrival-script-7208080_03052022001327_0305f_1651517007_717.jpg)
ಇಂದು ಮಧ್ಯಾಹ್ನ ಸಿಎಂ ನಿವಾಸದಲ್ಲಿ ಅಮಿತ್ ಶಾ ಅವರಿಗೆ ಭೋಜನ ಕೂಟ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನೂ ಈ ಭೋಜನ ಕೂಟಕ್ಕೆ ಆಹ್ವಾನಿಸುವ ನೆಪದಲ್ಲಿ, ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ನಾಯಕತ್ವ ಬದಲಾವಣೆ ವಿಷಯ ಮತ್ತೆ ಚರ್ಚೆಯಾಗುತ್ತಿದ್ದು, ಈ ಕುರಿತೂ ಕೂಡಾ ಸಮಾಲೋಚನೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಕುರಿತು ಸಲಹೆ ಪಡೆದುಕೊಂಡಿದ್ದಾರೆ.
ಯಡಿಯೂರಪ್ಪ ಭೇಟಿ ನಂತರ ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಸಿಎಂ ತೆರಳಿದರು. ಅಮಿತ್ ಶಾ ರಾತ್ರಿ 11.50ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ಸಿಎಂ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಈ ವೇಳೆ ಉಪಸ್ಥಿತರಿದ್ದರು ಬರಮಾಡಿಕೊಂಡರು.
ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದಾರೆ. ಕೋರ್ ಕಮಿಟಿಯ 16 ಸದಸ್ಯರು, 30 ಪದಾಧಿಕಾರಿಗಳು, ನಾಲ್ವರು ವಿಭಾಗವಾರು ಪ್ರತಿನಿಧಿಗಳು ಸೇರಿ 50 ಮಂದಿ ಪ್ರಮುಖರ ಜತೆ ಸಭೆ ನಡೆಯಲಿದೆ. ಭವಿಷ್ಯದ ಚುನಾವಣೆಗೆ ಟಾಸ್ಕ್ ಕೊಡಲಿರುವ ಅಮಿತ್ ಶಾ, ಸಂಘಟನೆ ಯಾವ ರೀತಿ ಮಾಡಬೇಕು, ಸರ್ಕಾರ ಮತ್ತು ಪಕ್ಷ ಹೇಗೆ ಸಾಗಬೇಕು, ವಿವಾದಗಳಿಂದ ದೂರವಿದ್ದು ಆಡಳಿತ ನಡೆಸುವ ಬಗೆ ಸೇರಿದಂತೆ ಹತ್ತು ಹಲವು ವಿಚಾರಗಳ ಕುರಿತು ಸಲಹೆ ಸೂಚನೆ ನೀಡಲಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ, ನಾಯಕತ್ವ ಬದಲಾವಣೆ ಗೊಂದಲಕ್ಕೂ ಇತಿಶ್ರೀ ಹಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿ.. ಕಾರ್ಯಕ್ರಮದ ವಿವರ ಹೀಗಿದೆ