ಬೆಂಗಳೂರು: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ನಿಗದಿಯಾಗಿರುವ ಸಿಇಟಿ ಪರೀಕ್ಷೆಯನ್ನು ನಡೆಸುವ ಸಂಬಂಧ ಕೈಗೊಂಡಿರುವ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದ ತಕ್ಷಣವೇ, ಇತ್ತ ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಉನ್ನತ ಮಟ್ಟದ ತುರ್ತುಸಭೆ ನಡೆಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸಾರಿಗೆ, ಆರೋಗ್ಯ, ಮತ್ತಿತರೆ ಇಲಾಖೆಗಳ ಉನ್ನತ ಅಧಿಕಾರಿಗಳ ಜೊತೆ ಡಿಸಿಎಂ ಮಹತ್ವದ ವಿಡಿಯೋ ಸಂವಾದ ನಡೆಸಿದರು.
ನ್ಯಾಯಾಲಯ ಹೇಳಿದ್ದೇನು?
ಜುಲೈ 30-31 ಹಾಗೂ ಅಗಸ್ಟ್ 1ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದೆ. ಆದರೆ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಎಸ್ಓಪಿ ಅನುಸಾರ ಕಂಟೈನ್ಮೆಂಟ್ ಝೋನ್ಗಳಲ್ಲಿರುವವರು ಮನೆಯಿಂದ ಹೊರಗೆ ಬರುವ ಹಾಗಿಲ್ಲ. ಜತೆಗೆ ಹೊರ ರಾಜ್ಯಗಳಿಂದ ಅನೇಕ ವಿದ್ಯಾರ್ಥಿಗಳು ರಾಜ್ಯಕ್ಕೆ ಬಂದು ಪರೀಕ್ಷೆ ಬರೆಯಲಿದ್ದಾರೆ.
ಬೆಂಗಳೂರಿನಲ್ಲೇ ಹೆಚ್ಚು ಕಂಟೈನ್ಮೆಂಟ್ ಝೋನ್ಗಳಿದ್ದು, ವಿದ್ಯಾರ್ಥಿಗಳು ಎಲ್ಲಿ ಹೋಗಲು ಸಾಧ್ಯ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹೈಕೋರ್ಟ್ ಸಿಇಟಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಷ್ಟೇ ಅಲ್ಲದೆ, ಬುಧವಾರ ಮಧ್ಯಾಹ್ನ 2.30 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ತುರ್ತು ಸಭೆಯ ನಿರ್ಧಾರಗಳು:
ಎಲ್ಲ ಜಿಲ್ಲೆಗಳಲ್ಲೂ, ಗಡಿನಾಡಿನಲ್ಲೂ ಪರೀಕ್ಷೆ ನಡೆಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೈಗೊಳ್ಳಲಾದ ರೀತಿಯಲ್ಲಿಯೇ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಆರೋಗ್ಯ, ಸಾರಿಗೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳೆಲ್ಲರೂ ಪರೀಕ್ಷೆ ನಡೆಸುವುದಕ್ಕೆ ಸಮಸ್ಯೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪರಿಷ್ಕೃತ ಎಸ್ಒಪಿ ಪ್ರಕಾರ, ಈಗ ಕಂಟೈನ್ಮೆಂಟ್ ಝೋನ್ನಲ್ಲಿ ಇರುವ ಪರೀಕ್ಷಾರ್ಥಿ ಅವರ ಪೋಷಕರೊಬ್ಬರು ಹೊರಬರಬಹುದು. ಪಾಸಿಟಿವ್ ಬಂದಿರುವ ಆಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಕೂರುವ ವ್ಯವಸ್ಥೆ ಮಾಡಲಾಗಿದೆ. ಜತೆಗೆ, ಎ ಸಿಂಪ್ಟಮೇಟಿಕ್ ಮತ್ತು ಕೆಮ್ಮು, ಶೀತದ ಲಕ್ಷಣಗಳಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಒಂದು ಸಣ್ಣ ಸಮಸ್ಯೆಯೂ ಇಲ್ಲದೆ, ಸಿಇಟಿ ವಿದ್ಯಾರ್ಥಿಗಳಿಗಿಂತ ಕಿರಿಯ ವಯಸ್ಸಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಯಶಸ್ವಿಯಾಗಿ ಪರೀಕ್ಷೆ ನಡೆಸಿದ ಉದಾಹರಣೆ ನಮ್ಮ ಮುಂದೆಯೇ ಇದೆ. ಗಡಿನಾಡು ಸೇರಿ ಎಲ್ಲ ಕೇಂದ್ರಗಳಲ್ಲಿಯೂ ಕೋವಿಡ್ ಹಿನ್ನೆಲೆಯಲ್ಲಿ ಸ್ಯಾನಿಟೈಸೇಷನ್, ದೈಹಿಕ ಅಂತರ, ಕೊಠಡಿಗಳ ನಿರ್ವಹಣೆ, ಆಂಬ್ಯುಲನ್ಸ್, ಸಾರಿಗೆ ಸೇರಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಯ ಕ್ಷೇಮವನ್ನೂ ಗಮನದಲ್ಲಿ ಇಟ್ಟುಕೊಂಡು ನಿಗಾ ವಹಿಸಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ನಾಳೆ ನ್ಯಾಯಾಲಯಕ್ಕೆ ಮಾಹಿತಿ
ಸಭೆಯಲ್ಲಿ ವ್ಯಕ್ತವಾದ ಎಲ್ಲ ಮಾಹಿತಿಯನ್ನು ಸಂಗ್ರಹ ಮಾಡಿದ ನಂತರ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ಇದಿಷ್ಟೂ ಮಾಹಿತಿಯನ್ನು ಬುಧವಾರ ಅಂದರೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಡ್ವೋಕೇಟ್ ಜನರಲ್ ಅವರ ಮುಖೇನ ನ್ಯಾಯಾಲಯಕ್ಕೆ ಸಭೆಯಲ್ಲಿ ವ್ಯಕ್ತವಾದ ಎಲ್ಲ ಬಗೆಯ ಅಭಿಪ್ರಾಯಗಳನ್ನು ಅರಿಕೆ ಮಾಡಿಕೊಳ್ಳಲಿದೆ. ಅಂತಿಮವಾಗಿ ನ್ಯಾಯಾಲಯ ನೀಡುವ ಸೂಚನೆಯನ್ನು ಸರಕಾರ ಚಾಚೂ ತಪ್ಪದೇ ಪಾಲಿಸುತ್ತದೆ ಎಂದು ತಿಳಿಸಿದರು.