ಬೆಂಗಳೂರು: ಕೆ.ಆರ್.ಪುರದಲ್ಲಿ ಬಿಜೆಪಿ ನಾಯಕರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ ಎನ್ನಲಾದ ಆಹಾರ ಸಾಮಗ್ರಿ ಗೋದಾಮಿನ ಮೇಲೆ ಕಾಂಗ್ರೆಸ್ ನಾಯಕರು ದಾಳಿ ನಡೆಸಿದ ಬೆನ್ನಲ್ಲೇ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಬಡವರಿಗೆ ವಿತರಿಸಲು ಸರ್ಕಾರಕ್ಕೆ ನೀಡಲಾಗಿದ್ದ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ನಿನ್ನೆ ರಾತ್ರಿ ಕಾಂಗ್ರೆಸ್ ನಾಯಕರು ದಾಳಿ ನಡೆಸಿದ್ದರು.
ಸಂಸ್ಥೆ ಅಂಟಿಸಿದ್ದ ಸ್ಟಿಕ್ಕರ್ಗಳನ್ನು ಕಿತ್ತು ಬಿಜೆಪಿಯಿಂದ ಬಡವರಿಗೆ ಹಂಚಲು ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ. ಅದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ರಾತ್ರಿಯಿಡೀ ಗೋದಾಮಿನ ಸುತ್ತಲೂ ಕಾವಲಿದ್ದರು. ಸ್ಥಳೀಯ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಅನುಯಾಯಿಗಳು ಆಹಾರ ಸಾಮಗ್ರಿಗಳ ಕಿಟ್ ಮೇಲೆ ಪಕ್ಷದ ಲೇಬಲ್ ಅಂಟಿಸಲು ಪ್ರಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿ ನಾಯಕರು ನಡೆಸುತ್ತಿರುವ ಅಕ್ರಮದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.