ಬೆಂಗಳೂರು: ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಅನುಷ್ಠಾನಕ್ಕೆ ಟರ್ಕಿ, ಇಸ್ರೇಲ್ ಹಾಗೂ ಸ್ವಿಸ್ ದೇಶಗಳ ಕಂಪನಿಗಳು ಆಸಕ್ತಿ ತೋರಿದ್ದು, ಶೀಘ್ರವಾಗಿ ಟೆಂಡರ್ ಅಂತಿಮಗೊಳಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ಜರುಗಿತು. ನಾಡಪ್ರಭು ಕೆಂಪೇಗೌಡ ಬಡಾವಣೆ ಹಾಗೂ ಡಾ. ಕೆ. ಶಿವರಾಮ ಕಾರಂತ ಬಡಾವಣೆಗಳಲ್ಲಿ ಮೂಲ ಸೌಲಭ್ಯಗಳಾದ ಒಳಚರಂಡಿ, ವಿದ್ಯುತ್ ಸಂಪರ್ಕ ರಸ್ತೆ ಮುಂತಾದ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಆದೇಶಿಸಿದರು.
ಖಾಲಿ ನಿವೇಶನಗಳು, ಪ್ಲಾಟ್ಗಳು ಹಾಗೂ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಪ್ರಾಧಿಕಾರದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಬಿ.ಡಿ.ಎ ಕಳೆದ ಸಾಲಿನಲ್ಲಿ 2066.72 ಕೊಟಿ ರೂ.ಗಳ ಆದಾಯ ಗಳಿಸಿದ್ದು, 1332.44 ಕೋಟಿಗಳು ವೆಚ್ಚವಾಗಿದೆ. ಈ ಬಾರಿ 9,530 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿದೆ ಎಂದರು.
ಬಿಡಿಎಗೆ ಸೇರಿದ ವಾಣಿಜ್ಯ ಸಂಕೀರ್ಣಗಳನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕುರಿತು ಪರಿಶೀಲಿಸಬೇಕು, ಮಳೆಗಾಲ ಪ್ರಾರಂಭವಾಗುವ ಹಿನ್ನೆಲೆ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳೆತ್ತಿ ವಿಲೇವಾರಿ ಮಾಡುವ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಚಿಕ್ಕಬಾಣಾವರ, ಕೊಮ್ಮ ಘಟ್ಟ ಹಾಗೂ ರಾಮಸಂದ್ರ ಕೆರೆಗಳ ಅಭಿವೃದ್ಧಿಗೂ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಲ್ಯಾಂಡ್ ಆಡಿಟ್ ಸಮೀಕ್ಷೆಯ ವರದಿಯಂತೆ ಪ್ರಾಧಿಕಾರಕ್ಕೆ ಲಭ್ಯವಿರುವ ಒಟ್ಟು ಆಸ್ತಿಯ ಕುರಿತ ಮಾಹಿತಿಯನ್ನು ಒದಗಿಸಬೇಕು, ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ 6431 ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವುದರಿಂದ ಕಾನೂನು ವಿಭಾಗವನ್ನು ಬಲಪಡಿಸಲು ಉತ್ತಮ ವಕೀಲರನ್ನು ನೇಮಿಸಿಕೊಳ್ಳುವಂತೆ ಬಿಎಸ್ವೈ ಸಲಹೆ ನೀಡಿದರು.
ಇನ್ನು ಇದೆ ಸಂದರ್ಭದಲ್ಲಿ ಪ್ರಾಧಿಕಾರವು ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಕೈಗೆತ್ತಿಕೊಳ್ಳಲಾಗಿರುವ ಗಣಕೀಕರಣ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಹ ಸೂಚಿಸಿದರು.