ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ, ಚುನಾವಣೆ ಸಿದ್ಧತೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ಸಂಜೆ ಸಭೆ ನಡೆಸಿದರು.
ಎರಡು ವಾರಗಳ ಹಿಂದೆ ಕೆಪಿಸಿಸಿ ಕಚೇರಿಯಲ್ಲಿ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆದಿತ್ತು. ಟಿಕೆಟ್ ಆಕಾಂಕ್ಷಿಗಳಾದ ವಿಧಾನ ಪರಿಷತ್ ಸದಸ್ಯ ಹಾಗೂ ಸಹೋದರ ಚಂದ್ರಶೇಖರ್ ಪಾಟೀಲ್ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಪಕ್ಷದ ಮಟ್ಟದಲ್ಲಿ ಲಾಬಿ ನಡೆಸುತ್ತಿರುವ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸಭೆಯಲ್ಲಿ ಭಾಗವಹಿಸಿ ತಮ್ಮವರ ಪರ ಒತ್ತಡ ಹೇರುವ ಕಾರ್ಯ ಮಾಡಿದ್ದರು.
ಆದರೆ ಈ ಸಂದರ್ಭ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟು ಹಿಡಿದು ಬಸವಕಲ್ಯಾಣ ಅಭ್ಯರ್ಥಿಯಾಗಿ ದಿ. ಬಿ.ನಾರಾಯಣರಾವ್ ಪತ್ನಿ ಮಲ್ಲಮ್ಮ ಅವರನ್ನೇ ಕಣಕ್ಕಿಳಿಸಬೇಕು ಎಂದು ಹೇಳಿದ್ದರು. ಇದೇ ಕಾರಣಕ್ಕೆ ಅಂದು ಸಭೆಯಿಂದ ಬೇಸರಗೊಂಡು ವಿಜಯ್ ಸಿಂಗ್ ಹಾಗೂ ರಾಜಶೇಖರ್ ಪಾಟೀಲ್ ಸಭೆಯನ್ನು ಅರ್ಧಕ್ಕೆ ಬಿಟ್ಟು ತೆರಳಿದ್ದರು. ತೆರಳುವ ಸಂದರ್ಭ ತಮ್ಮ ಅಸಮಾಧಾನವನ್ನು ಕೂಡ ಅವರು ಹೊರಹಾಕಿದ್ದರು. ಆದರೆ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಯನ್ನು ಹುಡುಕುವುದು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವಾಗಿದೆ.
ಬಿ.ನಾರಾಯಣರಾವ್ ಕುಟುಂಬಕ್ಕೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗಿ ಸಿಗುವುದು ಅನುಮಾನ ಎಂಬ ಅಭಿಪ್ರಾಯ ಸ್ಥಳೀಯ ನಾಯಕರಿಂದ ವ್ಯಕ್ತವಾಗಿರುವ ಹಿನ್ನೆಲೆ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಲಾಗಿದೆ. ಬಿಜೆಪಿ ಸರ್ಕಾರ ವೀರಶೈವ ಲಿಂಗಾಯತ ಹಾಗೂ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಕೂಡ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಕ್ಷೇತ್ರದ ಸ್ಥಳೀಯ ನಾಯಕರು ಹಾಗೂ ರಾಜ್ಯ ನಾಯಕರಿಂದ ವ್ಯಕ್ತವಾಗಿದೆ. ಈ ಹಿನ್ನೆಲೆಯಿಂದ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗಿದೆ.
ಇದನ್ನೂ ಓದಿ: ಚನ್ನಪಟ್ಟಣ-ರಾಮನಗರ ಬಿಟ್ಟು ನಾ ಎಲ್ಲೂ ಹೋಗಲ್ಲ, ಎಲ್ಲೂ ಹೋಗಲ್ಲ.. ಹೆಚ್ಡಿಕೆ
ಇನ್ನು ಸಭೆಯಲ್ಲಿ ಯಾವ ನಿರ್ಧಾರಕ್ಕೆ ಬರಲಾಗಿದೆ ಎಂಬ ಮಾಹಿತಿ ಲಭಿಸಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ಧ್ರುವನಾರಾಯಣ್ ಹಾಗೂ ಬೀದರ್ ಜಿಲ್ಲೆಯ ಮುಖಂಡರು ಭಾಗವಹಿಸಿದ್ದರು.