ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸಲು ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ನಿರ್ಧರಿಸಿದೆ.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಎಂ.ಡಿ.ಲಕ್ಷ್ಮಿ ನಾರಾಯಣ್ ನೇತೃತ್ವದಲ್ಲಿ ನಿಯೋಗ ತೆರಳಿ ಸಿದ್ದರಾಮಯ್ಯ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಲು ಹಾಗೂ ತಾವು ಕೈಗೊಂಡ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ರೂಪದಲ್ಲಿ ತಲುಪಿಸಲು ನಿರ್ಧರಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಬಾರದು. ಅವರ ರಾಜೀನಾಮೆ ಅಂಗೀಕಾರ ಮಾಡಿದ್ರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತೆ. ಇದರಿಂದಾಗಿ ಸಿದ್ದರಾಮಯ್ಯ ರಾಜೀನಾಮೆಯನ್ನು ಸ್ವೀಕರಿಸಬಾರದು ಎಂದು ಹೈಕಮಾಂಡ್ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಇದು ಈಗ ಇರುವ ಪಕ್ಷದ ಪರಿಸ್ಥಿತಿಗೆ ಸರಿಯಾದ ನಿರ್ಧಾರ ಅಲ್ಲ. ನಾವು ಈಗ ಸಿದ್ದರಾಮಯ್ಯ ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಎಐಸಿಸಿ ಹೈಕಮಾಂಡ್ಗೂ ಕೂಡ ನಾವು ಮನವಿ ಸಲ್ಲಿಸುತ್ತೇವೆ. ಸಿದ್ದರಾಮಯ್ಯ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ನಮ್ಮ ಪದಾಧಿಕಾರಿಗಳು ಕೂಡ ಒತ್ತಾಯ ಮಾಡಬೇಕು ಎಂದು ಸೂಚಿಸಿದರು. ಇದೇ ಸಭೆಯಲ್ಲಿ ಇತ್ತೀಚೆಗೆ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಾದ ರಿಜ್ವಾನ್ ಹರ್ಷದ್ ಹಾಗೂ ಮಂಜುನಾಥ್ ಅವರನ್ನು ಸನ್ಮಾನಿಸುವ ವಿವರ ಪ್ರಕಟಿಸಲಾಯಿತು.