ಬೆಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕ ಕುಸಿದು ಅನಾಹುತ ಸಂಭವಿಸಿರುವ ಹಿನ್ನೆಲೆ ಹೊಸದಾಗಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಸಿದ್ಧವಿದ್ದು, ಅದಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಪಾಲಿಕೆ ಆಯುಕ್ತರು, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಕಾಯ್ದೆ-2013ರ ಪ್ರಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪಾಲಿಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಪಾಲಿಕೆ ಪ್ರಸ್ತಾವನೆಯನ್ನು ಸರ್ಕಾರ ಪರಿಗಣಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತು.
ಮಂಗಳೂರು ನಗರ ಸ್ಮಾರ್ಟ್ ಸಿಟಿ ಯೋಜನೆ ಲಿಮಿಟೆಡ್ ಪರ ವಕೀಲರು, ಭವಿಷ್ಯದಲ್ಲಿ ಕಟ್ಟಡ ಮತ್ತು ನೆಲಸಮ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ನೀರಿ ಸಂಸ್ಥೆ ಸಾಮಾನ್ಯ ಶಿಫಾರಸುಗಳನ್ನು ನೀಡಿದೆ. ಅದರ ಪ್ರಕಾರ ಸ್ಮಾರ್ಟ್ ಸಿಟಿ ಯೋಜನೆಯಡಿಯ ತುರ್ತಾಗಿ ಕೈಗೊಳ್ಳಬೇಕಿರುವ ರಸ್ತೆ, ಒಳಚರಂಡಿ ಮುಂತಾದ ಅಗತ್ಯ ಕಾಮಗಾರಿಗಳನ್ನು ಆರಂಭಿಸಲು ಅನುಮೋದನೆ ಕೋರಿ ನೀರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೇಳಿಕೆಗೆ ಪ್ರತಿಕ್ರಿಯಿಸಿದ ಪೀಠ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕರು ನೀರಿ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಲಿ. ಅದನ್ನು ನೀರಿ ಆದ್ಯತೆ ಮೇಲೆ ಪರಿಗಣಿಸಲಿ ಎಂದು ಸೂಚಿಸಿ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿತು.