ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ ಆದೇಶವೊಂದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಗಣ್ಯರು, ಸಿಬ್ಬಂದಿ ವರ್ಗ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಜನರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎನ್ನುವ ಸುತ್ತೋಲೆ ಇದೀಗ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ಮೈಸೂರು ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಬೆಂಗಳೂರಿನ ಕಾರ್ಯಕ್ರಮಕ್ಕೆ ಯಾಕೆ? ಎಂಬ ಪ್ರಶ್ನೆ ಮೂಡಿದೆ.
ಪ್ರಧಾನಿ ನರೇಂದ್ರ ಮೋದಿ ಜೂ.20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಬೆಂಗಳೂರಿನ ಕಾರ್ಯಕ್ರಮಕ್ಕೆ ಒಂದು ರೂಲ್ಸ್, ಮೈಸೂರಿನ ಕಾರ್ಯಕ್ರಮಕ್ಕೆ ಮತ್ತೊಂದು ರೂಲ್ಸ್ ಮಾಡಿ ಅಧಿಕಾರಿಗಳು ಗೊಂದಲ ಸೃಷ್ಟಿಸಿದ್ದಾರೆ. ಬೆಂಗಳೂರಿನ ಪ್ರಧಾನಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಮಾಡಿದ್ದು, ಮೈಸೂರಿನ ಪ್ರಧಾನಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು ಎಂಬ ರೂಲ್ಸ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆಯುವ ಪ್ರಧಾನಿ ಕಾರ್ಯಕ್ರಮದ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ಆದೇಶ ಹೊರಡಿಸಲಾಗಿದ್ದು, ಮಾಧ್ಯಮ ಪ್ರತಿನಿಧಿಗಳಿಗೂ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ವಾರ್ತಾ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈ ಆದೇಶದ ಹಿನ್ನೆಲೆ ಸಿಎಂ, ಸಚಿವರು, ಶಾಸಕರು, ಬಿಜೆಪಿ ಮುಖಂಡರು ಕೂಡಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂಬ ಪ್ರಶ್ನೆ ಎದುರಾಗಿದೆ. ಮೋದಿ ಪಾಲ್ಗೊಳ್ಳುವ ಸಾರ್ವಜನಿಕ ಕಾರ್ಯಕ್ರಮಕ್ಕೆ ಬರುವ ಜನರಿಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೇ, ಬೇಡವೇ ಎಂಬ ಗೊಂದಲ ಉಂಟಾಗಿದೆ.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ: ಇಂತಿವೆ ರಾಜ್ಯ ಪ್ರವಾಸದ ವಿವರಗಳು