ಬೆಂಗಳೂರು: ಕಾಂಗ್ರೆಸ್ನಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಬಿಜೆಪಿ ಪ್ರಶ್ನಿಸುವುದು ಸರಿಯಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
![Former CM Siddaramaiah tweet](https://etvbharatimages.akamaized.net/etvbharat/prod-images/kn-bng-06-siddu-tweet-script-7208077_23082020165052_2308f_1598181652_122.jpg)
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು, ದುರ್ಬಲಗೊಳಿಸುವುದಲ್ಲ ಎಂದು ಖಾರವಾಗಿ ನುಡಿದಿದ್ದಾರೆ.
![Former CM Siddaramaiah tweet](https://etvbharatimages.akamaized.net/etvbharat/prod-images/kn-bng-06-siddu-tweet-script-7208077_23082020165052_2308f_1598181652_12.jpg)
ನಾಳೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ನಡೆಯಲಿದ್ದು, ಅಲ್ಲಿ ಪಕ್ಷದ ಮುಂದಿನ ನಾಯಕತ್ವದ ಬಗ್ಗೆ ಚರ್ಚೆ ನಡೆಯಲಿದೆ. ಈ ಸಂದರ್ಭ ಗಾಂಧಿ ಕುಟುಂಬದ ಸದಸ್ಯರಿಗೆ ಜವಾಬ್ದಾರಿ ನೀಡುವುದು ಅಥವಾ ಬೇರೆ ನಾಯಕರಿಗೆ ಮಣೆ ಹಾಕುವುದು ಎಂಬುದರ ಕುರಿತು ಚರ್ಚೆ ನಡೆಯಲಿದೆ. ಬಹುತೇಕ ಗಾಂಧಿ ಕುಟುಂಬವೇ ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿಯೇ ಕೆಲವರು ನಾಯಕತ್ವದ ವಿಚಾರದಲ್ಲಿ ಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಟೀಕೆ ಮಾಡಲು ಆರಂಭಿಸಿದ್ದು, ಇದನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ.
ಗಾಂಧಿ ಕುಟುಂಬ ಪಕ್ಷ ಮುನ್ನಡೆಸುವ ವಿಚಾರದಲ್ಲಿ ಪಕ್ಷದ ಆಂತರಿಕ ಚರ್ಚೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ನಮ್ಮ ಪಕ್ಷದ ನಾಯಕರು ಈ ವಿಚಾರದಲ್ಲಿ ಚರ್ಚಿಸದೆ ಸಂಘಟನೆಯತ್ತ ಗಮನ ಹರಿಸುವುದು ಉತ್ತಮ. ಸರ್ಕಾರ ಪ್ರಜಾಸತ್ತೆಯನ್ನು ಉಳಿಸಲು ನಾವು ಪಕ್ಷವನ್ನು ಸಂಘಟಿಸಬೇಕು ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.