ಬೆಂಗಳೂರು: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ ಸುಪ್ರಿಂಕೋರ್ಟ್ 2018ರಲ್ಲಿ ನೀಡಿರುವ ತೀರ್ಪಿನ ಅನ್ವಯವೇ ಕ್ರಮ ಕೈಗೊಂಡು ನೆರವು ನೀಡಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 'ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ'ಯಿಂದ ತಲಾ ₹ 10 ಸಾವಿರ ಪರಿಹಾರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಈ ಮಾಹಿತಿ ನೀಡಿದೆ.
ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹ ಹಾಗೂ ಅದರ ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ 2018ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯವೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿ ಮೆಮೋ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು.
ಮೆಮೋ ಹಾಗೂ ಸುಪ್ರೀಂಕೋರ್ಟ್ ತೀರ್ಪು ಪಾಲಿಸಿರುವ ಬಗ್ಗೆ ಸಲ್ಲಿಸಲಾಗಿರುವ ಪೂರಕ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಿದ ಪೀಠ, ಈ ಪ್ರತಿಗಳನ್ನು ಅರ್ಜಿದಾರರಿಗೂ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.