ಬೆಂಗಳೂರು: ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್, ಸಿದ್ದರಾಮಯ್ಯ ಆರೋಗ್ಯ ಸುಧಾರಿಸಿದೆ, ಚೇತರಿಸಿಕೊಳ್ಳುತ್ತಿದ್ದಾರೆ. ಚೆನ್ನಾಗಿ ಮಾತನಾಡಿದರು. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿದ್ದಾರೆ. ಮೊದಲಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ಇದೆ ಎಂದರು.
ಬಳಿಕ ಪಕ್ಷದಲ್ಲಿ ಅಸಮಾಧಾನದ ಬಗ್ಗೆ ಮಾತನಾಡಿದ ಯತ್ನಾಳ್, ಸಚಿವ ಶ್ರೀರಾಮುಲು ಅವರಿಗೆ ಅಸಮಾಧಾನವಾಗಿದೆ. ಅವರು ನಮ್ಮ ಪಕ್ಷದ ಪ್ರಮುಖ ನಾಯಕರು. ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರ ಬಂದಿದೆ. ಶ್ರೀರಾಮುಲು ಅವರಿಗೆ ಸರ್ಕಾರದಲ್ಲಿ ಸಮಸ್ಯೆ ಇರೋದು ನಿಜ. ಆ ಸಮಸ್ಯೆಯನ್ನ ಸಿಎಂ ಬಗೆಹರಿಸಲಿದ್ದಾರೆ ಎಂದು ಹೇಳಿದರು.
17 ಜನ ನಮಗಾಗಿ ರಾಜೀನಾಮೆ ಕೊಟ್ಟು ಬಂದಿದ್ದಾರೆ. ನಮಗೆ ಅವರು ಮೊದಲ ಆದ್ಯತೆ. ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇರುತ್ತಾರೆ. ಮೂಲ ಬಿಜೆಪಿಗರ ಅಸಮಾಧಾನ ಅಂತ ಏನು ಇಲ್ಲ ಎಂದರು.