ಬೆಂಗಳೂರು: ರಾಜ್ಯದ ಕೆಲ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ, ಆಸ್ತಿ-ಪಾಸ್ತಿ ಹಾನಿಗೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ವಿಡಿಯೋ ಸಂವಾದದ ಮೂಲಕ ನಾಳೆ ಕಲಬುರಗಿ ವಿಭಾಗದ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಆ ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ಕೂಡ ಕೆಲ ಮಾರ್ಗದರ್ಶನ ಮಾಡಲಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ವಿಡಿಯೋ ಸಂವಾದ ನಡೆಸಲಿದ್ದಾರೆ. ಕಲಬುರಗಿ ವಿಭಾಗದ ಜೆಡಿಎಸ್ ಮುಖಂಡರು, ಶಾಸಕರು, ಮಾಜಿ ಸಚಿವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರೊಂದಿಗೆ ಸಂವಾದ ನಡೆಸುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೊರೊನಾ ಸಂಕಷ್ಟವಿರುವುದರಿಂದ ಸಭೆ, ಸಮಾರಂಭ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಡಿಯೋ ಸಂವಾದ ನಡೆಸಿ ಮಳೆ ಹಾನಿಯ ವಿವರ, ಸರ್ಕಾರದ ಪರಿಹಾರ ಕಾರ್ಯಗಳ ಬಗ್ಗೆ ಪಕ್ಷದ ಮುಖಂಡರಿಂದ ಮಾಹಿತಿ ಪಡೆಯಲಿದ್ದಾರೆ. ಜತೆಗೆ ಪಕ್ಷ ಸಂಘಟನೆ ಕುರಿತಂತೆ ಸಲಹೆ, ಮಾರ್ಗದರ್ಶನವನ್ನು ಪಕ್ಷದ ನಾಯಕರು ನೀಡಲಿದ್ದಾರೆ. ಬೆಳಗಾವಿ ಹಾಗೂ ಮೈಸೂರು ವಿಭಾಗದ ಪಕ್ಷದ ಮುಖಂಡರೊಂದಿಗೆ ಈಗಾಗಲೇ ಜೆಡಿಎಸ್ ನಾಯಕರು ವಿಡಿಯೋ ಸಂವಾದ ನಡೆಸಿದ್ದಾರೆ.