ಬೆಂಗಳೂರು: ನನ್ನ ಸರ್ಕಾರದಲ್ಲಿ ಜಾರಿಗೆ ತಂದ ಯೋಜನೆಗಳನ್ನೇ ಹೈಜಾಕ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವುಗಳನ್ನು ತಮ್ಮ ಸ್ವಂತ ಯೋಜನೆಗಳು ಎಂಬಂತೆ ಈಗ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜರಾಜೇಶ್ವರಿನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಇಂದು ಸಂಜೆ ಮತಯಾಚಿಸಿ ಮಾತನಾಡಿದ ಅವರು, ನಾನು 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸುವುದಕ್ಕೆ ಉತ್ತೇಜನ ನೀಡಿದೆ. ಅದನ್ನೇ ಈಗ ಆತ್ಮನಿರ್ಭರ ಭಾರತ ಎಂದು ಮೋದಿ ಹೇಳುತ್ತಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ನೀಡಲು ಬಡವರ ಬಂಧು ಯೋಜನೆ ಜಾರಿಗೆ ತಂದಿದ್ದೆ, ಈಗ ಮೋದಿ ಅವರು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಈ ದೇಶವನ್ನು ಬಾಂಗ್ಲಾದೇಶ, ವಿಯಾಟ್ನಾಂ ಜೊತೆ ಪೈಪೋಟಿ ನಡೆಸುವ ಹಂತಕ್ಕೆ ಮೋದಿ ತಂದಿದ್ದಾರೆ ಎಂದರು.
ಜೆಡಿಎಸ್ ಕೇವಲ ಕೃಷಿಕರಿಗಾಗಿ ಇರುವ ಪಕ್ಷ ಅಲ್ಲ, ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕೊಡುಗೆ ನೀಡಿದೆ. ಅದರಲ್ಲೂ ಬೆಂಗಳೂರಿನ ಪ್ರಗತಿಗೆ ನಮ್ಮ ಪಕ್ಷದ ಕೊಡುಗೆ ಅಪಾರ. ನಮ್ಮ ಮೆಟ್ರೋ, ಎಲಿವೇಟೆಡ್ ಕಾರಿಡಾರ್ನಂತಹ ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದು ನನ್ನ ಸರ್ಕಾರದಲ್ಲಿ ಎಂದ ಅವರು, ಬೆಂಗಳೂರಿಗೆ ಕಾವೇರಿ ನೀರು ಸಿಗಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾರಣ ಎಂದು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 6.5 ಕೋಟಿ ಕನ್ನಡಿಗರ ಭರವಸೆ ಈಡೇರಿಸಿಲ್ಲ. ಬದಲಾಗಿ ಅವರನ್ನು ಸಿಎಂ ಮಾಡಲು ಬೆಂಬಲ ನೀಡಿದ 17 ಶಾಸಕರ ಭರವಸೆ ಮಾತ್ರ ಈಡೇರಿಸಿದ್ದಾರೆ. ಬಿಜೆಪಿ ಪಕ್ಷ ಎರಡು ಕ್ಷೇತ್ರಗಳಲ್ಲಿ ಆರ್ಭಟದ ಪ್ರಚಾರ ನಡೆಸುತ್ತಿದೆ. ಆದರೆ, ಅಲ್ಲಿಗೆ ಬರುತ್ತಿರುವ ಯಾರು ಸ್ಥಳೀಯರಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಈಗಾಗಲೇ ಎರಡು ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಸಿಎಂ ಹೇಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದರು.
ಇನ್ನು ರಾಜರಾಜೇಶ್ವರಿನಗರದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಬಿಟ್ಟು ಪ್ರಾದೇಶಿಕ ಪಕ್ಷಕ್ಕೆ ಅವಕಾಶ ನೀಡುವ ಅಲೆ ಕಾಣುತ್ತಾ ಇದೆ. ರಸ್ತೆಯಲ್ಲಿ ಪಟಾಕಿ ಹೊಡೆಯದೇ, ಅಬ್ಬರದ ಪ್ರಚಾರ ಮಾಡದೇ ಆತ್ಮೀಯವಾಗಿ ಜನರನ್ನು ಭೇಟಿ ನೀಡಿ ಮತ ಕೇಳಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇನ್ನು ಈಗಾಗಲೇ ಸೀರೆ ಹಂಚುವ ಕಾರ್ಯಕ್ರಮ ಶುರು ಮಾಡಿದ್ದಾರೆ. ಇವರು ನ್ಯಾಯವಾಗಿ ಕೆಲಸ ಮಾಡಿದ್ದರೆ ಸೀರೆ, ಹಣ ಹಂಚಿ ವೋಟ್ ಕೇಳುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ದಾಸರಹಳ್ಳಿ ಶಾಸಕ ಆರ್.ಮಂಜುನಾಥ್, ಲಕ್ಷಾಂತರ ಜನರಿಗೆ ಉದ್ಯೋಗ ನೀಡುತ್ತಿರುವ ಪೀಣ್ಯ ಇಂಡಸ್ಟ್ರೀಯಲ್ ಅಸೋಸಿಯೇಷನ್ಗಾಗಿ ಸರ್ಕಾರ ಏನು ಮಾಡಿದೆ. ದ್ವೇಷದ ರಾಜಕೀಯ ಮಾಡುತ್ತಾ ಕುಮಾರಸ್ವಾಮಿ ಅವರ ಸರ್ಕಾರ ಜಾರಿಗೆ ತಂದಿದ್ದ ಒಳ್ಳೆಯ ಯೋಜನೆಗಳನ್ನು ನಿಲ್ಲಿಸಿದರು. ಬೆಂಗಳೂರಿನ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಕುಮಾರಣ್ಣ ಅನುದಾನ ನೀಡಿದ್ದರು. ಆದರೆ, ಅವರೆಲ್ಲಾ ಆ ಕೆರೆಗಳನ್ನು ಮಾರಿಕೊಂಡಿದ್ದಾರೆ ಎಂದು ಹೇಳಿದರು.
ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವ ಕಾರ್ಯಗಳನ್ನು ಖಂಡಿತವಾಗಿ ಮಾಡುತ್ತೇವೆ. ಈ ಬಾರಿ ಅವಕಾಶ ನೀಡಿ ಎಂದು ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮತಯಾಚಿಸಿದರು.