ಬೆಂಗಳೂರು : ನೆರೆಮನೆ ವ್ಯಕ್ತಿಯ ಮೇಲೆ ಹಲ್ಲೆ ಹಾಗೂ ನಿಂದನೆಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಮಹಿಳೆ ನೀಡಿದ್ದ ಮರಣಪೂರ್ವ ಹೇಳಿಕೆಯನ್ನು ಪರಿಗಣಿಸಿರುವ ಹೈಕೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದಿಂದ ಖುಲಾಸೆಯಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮಹಿಳೆಯ ಸಾವಿಗೆ ಕಾರಣನಾದ ಆರೋಪಿ ಶಾಂತಾಶೆಟ್ಟಿ ಎಂಬಾತನನ್ನು ಪ್ರಕರಣದಿಂದ ಖುಲಾಸೆ ಮಾಡಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಕೋರಿ ಹಾಗೂ ಆರೋಪಿಗೆ ಶಿಕ್ಷೆ ವಿಧಿಸುವಂತೆ ಕೋರಿ ಚಾಮರಾಜನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಪೀಠ ತನ್ನ ತೀರ್ಪಿನಲ್ಲಿ, ಮರಣಪೂರ್ವ ಹೇಳಿಕೆ ನೀಡಿರುವ ಮಹಿಳೆಯು ಮಾನಸಿಕವಾಗಿ ಸದೃಢರಾಗಿದ್ದರು ಎಂಬುದಕ್ಕೆ ವೈದ್ಯರು ಪ್ರಮಾಣಪತ್ರ ನೀಡಿಲ್ಲ ಎಂಬ ಕಾರಣಕ್ಕೆ ವಿಚಾರಣಾ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿದೆ. ಆದರೆ, ವೈದ್ಯರು ನೀಡುವ ಸಂತ್ರಸ್ತರ ಮಾನಸಿಕ ಸದೃಢತೆ ಪ್ರಮಾಣ ಪತ್ರ ಒಂದು ತಾಂತ್ರಿಕ ಅಂಶವೇ ಹೊರತು ಅದು ಸಾಕ್ಷ್ಯವಲ್ಲ. ಅದು ಕಡ್ಡಾಯವೂ ಅಲ್ಲ. ಮರಣಪೂರ್ವ ಹೇಳಿಕೆ ವಿಶ್ವಾಸಾರ್ಹವಾಗಿದ್ದರೆ ಅದನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೇ, ಮರಣಪೂರ್ವ ಹೇಳಿಕೆಯನ್ನು ಸಂತ್ರಸ್ತರೇ ಪ್ರಮಾಣೀಕರಿಸಿರುತ್ತಾರೆ. ಇದು ಮರಣಪೂರ್ವ ಹೇಳಿಕೆ ದಾಖಲಿಸಿದ ಸಂತ್ರಸ್ತ ವ್ಯಕ್ತಿ ಮಾನಸಿಕವಾಗಿ ಸದೃಢವಾಗಿ ಇದ್ದರು ಎಂಬುದನ್ನು ನಿರೂಪಿಸುತ್ತದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಮರಣಪೂರ್ವ ಹೇಳಿಕೆ ವೇಳೆ ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಆಕೆಯ ಪತಿ ಹಾಗೂ ಪ್ರತ್ಯಕ್ಷದರ್ಶಿಗಳು ಗಲಾಟೆಯಿಂದ ಮನನೊಂದೇ ಆಕೆ ಆತ್ಮಹತ್ಯೆ ಮಾಡಿಕೊಂಡರೆಂದು ಸಾಕ್ಷಿ ಹೇಳಿದ್ದಾರೆ.
ಸಂತ್ರಸ್ತೆಯ ಮರಣಪೂರ್ವ ಹೇಳಿಕೆಯನ್ನು ಮುಖ್ಯಪೇದೆಯೊಬ್ಬರು ದಾಖಲಿಸಿಕೊಂಡಿದ್ದಾರೆ. ಇವೆಲ್ಲವನ್ನೂ ಗಮನಿಸಿದಾಗ ಮಹಿಳೆಯ ಆತ್ಮಹತ್ಯೆಗೆ ಆರೋಪಿ ಶಾಂತಾಶೆಟ್ಟಿ ಪ್ರಚೋದನೆಯೇ ಕಾರಣ ಎಂಬುದು ಸಾಬೀತಾಗಿದೆ ಎಂದು ಪೀಠ ಅಭಿಪ್ರಾಯಪಟ್ಟು, 7 ವರ್ಷ ಜೈಲು ಶಿಕ್ಷೆ 17 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ : 2008ರ ಜೂನ್ 12ರಂದು ಚಾಮರಾಜನಗರದ ಕೊಳ್ಳೆಗಾಲ ನಿವಾಸಿ ಶಾಂತಾಶೆಟ್ಟಿ ಪಕ್ಕದ ಮನೆ ಮಹಿಳೆಯೊಂದಿಗೆ ಜಗಳ ಮಾಡಿದ್ದ. ಸಂತ್ರಸ್ತ ಮಹಿಳೆ ಮನೆ ಎದುರು ಹೋಗಿ ತನ್ನ ಪತ್ನಿಯೊಂದಿಗೆ ಸಂಘದಲ್ಲಿ ಜಗಳ ಮಾಡಿದ್ದೇಕೆ ಎಂದು ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿದ್ದ. ಅಲ್ಲದೇ, ಆಕೆಯನ್ನು ಹೊರಗೆಳೆದು ತಂದು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದ.
ಹಾಗೆಯೇ, ಬದುಕಿರುವ ಬದಲು ಹೋಗಿ ಸಾಯಿ ಎಂದು ನಿಂದಿಸಿದ್ದ. ಅಪಮಾನದಿಂದ ಮನನೊಂದ ಮಹಿಳೆ ಮನೆಯಲ್ಲಿದ್ದ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಂಚಿಕೊಂಡಿದ್ದರು. ಗಲಾಟೆ ತಿಳಿದು ತಕ್ಷಣವೇ ಮನೆಗೆ ಬಂದ ಪತಿ ಬೆಂಕಿ ನಂದಿಸಿ ಪತ್ನಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಐದು ದಿನಗಳ ಬಳಿಕ ಸಂತ್ರಸ್ತ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.
ಇದಕ್ಕೂ ಮುನ್ನ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಕೊಳ್ಳೇಗಾಲ ಗ್ರಾಮೀಣ ಠಾಣೆ ಪೊಲೀಸರು ವೈದ್ಯರ ಸೂಚನೆ ಮೇರೆಗೆ ಮಖ್ಯಪೇದೆ ಕಳುಹಿಸಿ ಸಂತ್ರಸ್ತೆಯ ಮರಣಪೂರ್ವ ಹೇಳಿಕೆ ದಾಖಲಿಸಿಕೊಂಡಿದ್ದರು. ಅದರಂತೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಶಾಂತಾಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಕುರಿತು ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.
ವಿಚಾರಣಾ ನ್ಯಾಯಾಲಯ, ಮರಣಪೂರ್ವ ಹೇಳಿಕೆ ನೀಡಿದ ಮಹಿಳೆಯು ಮಾನಸಿಕ ಸದೃಢವಾಗಿದ್ದರು ಎಂಬುದನ್ನು ದೃಢೀಕರಿಸಿ ವೈದ್ಯರು ಪ್ರಮಾಣ ಪತ್ರ ನೀಡಿಲ್ಲ ಎಂಬ ಅಂಶ ಪರಿಗಣಿಸಿತ್ತು. ಈ ನಿಟ್ಟಿನಲ್ಲಿ ಮರಣಪೂರ್ವ ಹೇಳಿಕೆ ವಿಶ್ವಾಸಾರ್ಹವಾಗಿಲ್ಲ ಎಂದು ಆರೋಪಿಯನ್ನು 2011ರ ಜೂನ್ 3ರಂದು ಖುಲಾಸೆಗೊಳಿಸಿತ್ತು.
(ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ಜಾನುವಾರು ಸಾಗಣೆ ನಿರ್ಬಂಧಿಸುವ ಸೆಕ್ಷನ್ 5ರ ಜಾರಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್)