ಬೆಂಗಳೂರು: ಕಲಬುರಗಿಯ ಜಿಲ್ಲೆಯ ಸೇಡಂ ತಾಲೂಕಿನ ಶಾಸಕರೊಬ್ಬರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದ ಮಹಿಳೆಗೆ ಭದ್ರತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ. ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರು ಮಹಿಳೆಗೆ ಭದ್ರತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆ ಮಹಿಳೆಗೆ ಸರ್ಕಾರಿಂದ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.
ಗೃಹ ಸಚಿವರಿಗೆ ಮನವಿ ಪತ್ರ ನೀಡಿದ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಮಾತನಾಡಿ, ಮಹಿಳೆಯೊಬ್ಬರಿಗೆ ಶಾಸಕರಿಂದ ಅನ್ಯಾಯವಾಗಿದೆ ಎಂದು ಮಾಧ್ಯಮಗಳ ಮೂಲಕ ಮಾಹಿತಿ ತಿಳಿದ ಬಳಿಕ ಆಯೋಗವು ಈ ಬಗ್ಗೆ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ.
ಅಲ್ಲದೇ, ಈ ಬಗ್ಗೆ ಪೊಲೀಸ್ ಆಯುಕ್ತರು, ಐಜಿಪಿ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆಯಲಾಗಿದೆ. ಮಹಿಳೆಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಂಡಿದ್ದೇನೆ. ಸುಮೋಟೋ ಕೇಸ್ ಕುರಿತು ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರಿಗೂ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.
ಮಾರ್ಚ್ 2020 ರಿಂದ ಡಿಸೆಂಬರ್ 2021 ರವರೆಗೆ ಮಹಿಳಾ ಆಯೋಗಕ್ಕೆ ಒಟ್ಟು 4041 ದೂರುಗಳು ಬಂದಿವೆ. ಕೌಟುಂಬಿಕ ದೌರ್ಜನ್ಯ, ಆಸ್ತಿ ವಿವಾದ, ಕಿರುಕುಳ ಲೈಂಗಿಕ ಕಿರುಕುಳ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಈ ಕುರಿತು ಗೃಹ ಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ ಎಂದರು.
ಹಿಜಾಬ್-ಕೇಸರಿ ಗಲಾಟೆಯ ವಿಚಾರ: ಪೊಲೀಸರು ಹಿಜಾಬ್- ಕೇಸರಿ ವಿಚಾರವಾಗಿ ಸೂಕ್ತ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ. ಯಾವ್ಯಾವ ಶಾಲೆಗಳು ಸೂಕ್ಷ್ಮ ಪ್ರದೇಶದಲ್ಲಿ ಇವೆಯೋ ಅಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಕೋರ್ಟ್ ತೀರ್ಪು ಯಾರ ಪರವಾಗಿಯೇ ಬಂದರೂ, ಅದನ್ನು ಎಲ್ಲರೂ ಒಪ್ಪಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಕೋರ್ಟ್ ತೀರ್ಪು ಏನೇ ಆಗಿದ್ದರೂ ಇದು ವಿದ್ಯಾರ್ಥಿಗಳ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಬಾರದು. ಪರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ತಯಾರಿ ನಡೆಸಬೇಕು. ಈ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಸಹಕರಿಸಬೇಕು ಎಂದು ವಿನಂತಿಸಿದರು.