ದಾವಣಗೆರೆ: ಎಥೆನಾಲ್ ಘಟಕ ನಿರ್ಮಿಸುತ್ತಿದ್ದಾಗ ಕಟ್ಟಡದ ಪಿಲ್ಲರ್ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಕುಕ್ಕವಾಡ ಗ್ರಾಮದ ಶಾಮನೂರು ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.

ರಾಯಚೂರಿನ ಬಸಪ್ಪ (32), ಮಾನಪ್ಪ (32) ಸ್ಥಳದಲ್ಲೇ ಮೃತಪಟ್ಟರೆ ತೀವ್ರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳದ ಮಜೀದ್ (28) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಕುಕ್ಕವಾಡ ಶುಗರ್ಸ್ ಕಾರ್ಖಾನೆಯ ಪಕ್ಕದಲ್ಲೇ ಎಥೆನಾಲ್ ಘಟಕ ನಿರ್ಮಿಸಲಾಗುತ್ತಿತ್ತು. ಈ ವೇಳೆ ಕಟ್ಟಡದ ಪಿಲ್ಲರ್ ಇದ್ದಕ್ಕಿದ್ದಂತೆ ಕುಸಿದಿದೆ. ಪರಿಣಾಮ 15 ಜನ ಅದರ ಒಳಗೆ ಸಿಲುಕಿದ್ದು ಮೂವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಗಣೇಶ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಇದಾಗಿದೆ. ಇನ್ನು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಿಕಿತ್ಸೆಗಾಗಿ ಗಾಯಾಳುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಐದಾರು ಜನ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಹದಡಿ ಪೊಲೀಸ್ ಠಾಣೆ ಪೊಲೀಸರು ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
