ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿಗಳ ನೇಮಕಾತಿ, ಬೋಧಕ-ಬೋಧಕೇತರ ಸಿಬ್ಬಂದಿ ನೇಮಕಾತಿ ಹಾಗೂ ವಿವಿಗಳಲ್ಲಿ ನಡೆದ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಧಾರವಾಡ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಸಪ್ತಾಪುರ ವೃತ್ತದಿಂದ ಪ್ರಾರಂಭಗೊಂಡು ಕರ್ನಾಟಕ ವಿಶ್ವವಿದ್ಯಾಲಯದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪ್ರಭಾರಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ದೇಶದ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಒಂದು ಹೆಮ್ಮೆಯ ಗರಿ ಎಂಬಂತೆ 'ಶಿಕ್ಷಣದ ರಾಜಧಾನಿ'ಯಾಗಿ ಇಂದು ಬೆಳೆದು ನಿಂತಿದೆ. ಇಷ್ಟೆಲ್ಲದರ ನಡುವೆ ಇಂದು ರಾಜ್ಯದ ಶೈಕ್ಷಣಿಕ ಪರಿಸ್ಥಿತಿ, ವಿವಿಗಳ ಪರಿಸ್ಥಿತಿಯನ್ನೊಮ್ಮೆ ನೋಡಿದರೆ ಶಿಕ್ಷಣದ ಮೂಲ ಉದ್ದೇಶವನ್ನೇ ಮರೆತ ಹಾಗಿದೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಸಿಬ್ಬಂದಿಗಳಿಲ್ಲದೇ ವಿವಿಗಳು ಖಾಲಿ- ಖಾಲಿ..
ಉನ್ನತ ಗುಣಮಟ್ಟದ ಶಿಕ್ಷಣ ಮತ್ತು ಜ್ಞಾನ ಸರ್ವರಿಗೂ ಸಿಗುವಂತಾಗಲಿ ಎಂಬ ಮಹಾನ್ ಉದ್ದೇಶದಿಂದ ರಾಜ್ಯದಲ್ಲಿ ಅನೇಕ ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಲಾಯಿತು. ಆದರೆ ಬೋಧಕ & ಬೋಧಕೇತರ ಸಿಬ್ಬಂದಿಯ ನೇಮಕಾತಿಯೇ ಆಗದೇ ಇಂದು ಹಲವಾರು ವಿಶ್ವವಿದ್ಯಾಲಯಗಳು ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುತ್ತಿರುವುದು ಶೋಚನಿಯ ಸಂಗತಿಯಾಗಿದೆ.
ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳ ನೇಮಕ ಇನ್ನೂ ಆಗಿಲ್ಲ. ಅಷ್ಟೇ ಅಲ್ಲ. ಪ್ರಸ್ತುತ ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ 6 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇದು ರಾಜ್ಯ ಸರ್ಕಾರಕ್ಕೆ ಉನ್ನತ ಶಿಕ್ಷಣದ ಬಗ್ಗೆ ಇರುವ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಂತಿದೆ. ಉನ್ನತ ಶಿಕ್ಷಣದ ಉಳಿವಿಗಾಗಿ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಗಳ ಎಲ್ಲಾ ಹುದ್ದೆಗಳ ನೇಮಕಾತಿ ಮಾಡಬೇಕು. ಅಷ್ಟೆ ಅಲ್ಲದೇ ರಾಜ್ಯದಲ್ಲಿ 412 ಪ್ರಥಮ ದರ್ಜೆ ಕಾಲೇಜುಗಳಿದ್ದು, ಇದರ ಪೈಕಿ ಬಹುತೇಕ ಕಾಲೇಜುಗಳಲ್ಲಿ ಗ್ರೇಡ್-1 ಪ್ರಾಂಶುಪಾಲರ ಹುದ್ದೆಗಳು ಮಂಜೂರಾಗಿದ್ದರೂ ಕಾರ್ಯನಿರ್ವಹಿಸುತ್ತಿರುವವರ ಸಂಖ್ಯೆ ಕಡಿಮೆ. ಇನ್ನೂ ಅನೇಕ ಹುದ್ದೆಗಳು ಖಾಲಿ ಉಳಿದಿದ್ದು, ತಕ್ಷಣ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಎಬಿವಿಪಿ ಸಂಘಟನಾಕಾರರು ಆಗ್ರಹಿಸಿದರು.