ಮಂಗಳೂರು: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರವೇಶಕ್ಕೆ ಇ-ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ. ಇದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ.
ಲಾಕ್ಡೌನ್ನಿಂದಾಗಿ ಮುಚ್ಚಲ್ಪಟ್ಟಿದ್ದ ಕಟೀಲು ದೇವಸ್ಥಾನಕ್ಕೆ ಜೂನ್ 14 ರಿಂದ ಭಕ್ತರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ, ಭಕ್ತರು ದೇವಸ್ಥಾನದ ವೆಬ್ಸೈಟ್ನಿಂದ ಉಚಿತವಾಗಿ ಇ-ಟಿಕೆಟ್ ಪಡೆದು ದೇವಸ್ಥಾನ ಪ್ರವೇಶಿಸಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಸರ್ಕಾರ ವಿಧಿಸಿರುವ ನಿಯಮಗಳನ್ನು ಪಾಲಿಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಲು ಮತ್ತು ಭಕ್ತರ ಸರತಿ ಸಾಲಿನ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇದೆ. ಇದಕ್ಕೆ ಸಿದ್ಧತೆ ಮಾಡಬೇಕಾದ ಕಾರಣ ಜೂನ್ 8ರಂದು ತೆರೆಯಬೇಕಿದ್ದ ದೇಗುಲವನ್ನು ಜೂನ್ 14ರಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.
ಇ-ಪಾಸ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗಿದ್ದು, ಪ್ರಾಯೋಗಿಕವಾಗಿಯೂ ನೋಡಲಾಗಿದೆ. ಭಕ್ತರು ವೆಬ್ಸೈಟ್ ಮೂಲಕ ಹೆಸರು ನೋಂದಾಯಿಸಿ ದೇಗುಲಕ್ಕೆ ಬರಬಹುದು. ಪ್ರತಿ 15 ನಿಮಿಷಕ್ಕೆ 60 ಮಂದಿಗೆ ಭೇಟಿಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 7.30ರಿಂದ ಸಂಜೆ 7.30ರ ತನಕ ಪ್ರವೇಶಕ್ಕೆ ಅವಕಾಶ ಇರಲಿದೆ.
ಸ್ಥಳೀಯ ಭಕ್ತರು ಇ-ಪಾಸ್ ಇಲ್ಲದೆಯೇ ದೇಗುಲಕ್ಕೆ ಭೇಟಿ ನೀಡಬಹುದು. ಆದ್ರೆ ದೇಗುಲದಲ್ಲಿ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲವೆಂದು ಸೂಚಿಸಲಾಗಿದೆ.