ಮೈಸೂರು: ಸಿದ್ದರಾಮಣ್ಣ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಕುಮಾರಣ್ಣನನ್ನು ಕೆಳಗಿಳಿಸಿದ್ದೇ ಸಿದ್ದರಾಮಣ್ಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರ ಸದ್ಯದಲ್ಲೇ ಪತನವಾಗುತ್ತದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಕಟೀಲ್ ಅವರು, ಕುಮಾರಸ್ವಾಮಿ ಅವರನ್ನು ಕೆಳಗಿಳಿಸಿದ್ದು, ಸಿದ್ದರಾಮಯ್ಯ ಅವರು. ಇನ್ಮುಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಬಿಡುವುದಿಲ್ಲ. ಹೀಗಾಗಿ, ಬಿಜೆಪಿ ಮತ್ತಷ್ಟು ಗಟ್ಟಿಯಾಗಿದೆ ಎಂಬ ಸಂದೇಶವನ್ನು ಸಿದ್ದರಾಮಯ್ಯ ಅವರೇ ಹೇಳುತ್ತಿದ್ದಾರೆ ಎಂದರು.
ನಮ್ಮ ಸರ್ಕಾರ ಸುಭದ್ರವಾಗಿದೆ. ನನಗೆ ಬೇರೆ ಪಕ್ಷಗಳ ಶಾಸಕರ ಅವಶ್ಯಕತೆ ಇಲ್ಲ. ಶಾಸಕರು ಹಾಗೂ ಸಂಸದರು ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಸಭೆಗಳನ್ನು ಮಾಡಿದ್ದಾರೆ. ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದರಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿಲ್ಲ. ಹಾಗೇನಾದರೂ ನಡೆದರೆ ಭಾರತೀಯ ಜನತಾ ಪಾರ್ಟಿ ಸಹಿಸುವುದಿಲ್ಲ. ಶಿಸ್ತು ಕ್ರಮವನ್ನು ಕೈಗೊಳ್ಳುತ್ತದೆ ಎಂದು ಎಚ್ಚರಿಕೆಯನ್ನೂ ರವಾನಿಸಿದರು.
ಶಾಸಕರೆಲ್ಲ ಒಟ್ಟಿಗೆ ಸೇರಿ ರೊಟ್ಟಿ ತಿಂದು, ಚಹಾ ಕುಡಿದಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ಯಡಿಯೂರಪ್ಪ ಅವರೇ ನಮ್ಮ ನಾಯಕರು ಎಂದರು. ವಲಸೆ ಕಾರ್ಮಿಕರ ವಿಚಾರದಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.