ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಸಿ.ಪಿ.ಯೋಗೇಶ್ವರ್ ಹಾಗೂ ನಟಿ ಶ್ರುತಿ ಭೇಟಿ ನೀಡಿ ದೇಶಿಕೇಂದ್ರ ಸ್ವಾಮೀಜಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು.
ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಪೂರ್ಣಕುಂಭದೊಂದಿಗೆ ಸ್ವಾಗತ ಕೋರಲಾಯಿತು. ಇಬ್ಬರು ಸಚಿವರು ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಅವರು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜೊತೆ ಕೆಲಕಾಲ ಮಾತುಕತೆ ನಡೆಸಿ, ಅನೇಕ ವಿಷಯಗಳ ಕುರಿತು ಚರ್ಚಿಸಿದರು.
ಈ ವೇಳೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಮೈಸೂರಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ಮಂಡಕಳ್ಳಿ ವಿಮಾನ ನಿಲ್ದಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ಬೃಹತ್ ಕೈಗಾರಿಕೆಗಳು ಚೇತರಿಕೆ ಕಾಣುತ್ತಿವೆ ಎಂದು ಸ್ವಾಮೀಜಿಗೆ ಹೇಳಿದರು.
ನಂತರ ಮಾತನಾಡಿದ ಸಿ.ಪಿ.ಯೋಗೇಶ್ವರ್, ನನ್ನ ಮಗನಿಗೆ ಕೃಷಿ ಕ್ಷೇತ್ರ ಇಷ್ಟವಿದೆ ಎಂದು ಸುತ್ತೂರು ಶ್ರೀಗಳಿಗೆ ಹೇಳಿದಾಗ, ಕೃಷಿ ವಲಯದಲ್ಲಿ ಸಾಕಷ್ಟು ತಂತ್ರಜ್ಞಾನ ಮುಂದುವರೆದಿದೆ. ಒಳ್ಳೆಯ ಕ್ಷೇತ್ರ ಎಂದು ಸಲಹೆ ನೀಡಿದರು.