ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್ ಕಾನೂನು ಘಟಕ ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಅವರಿಗೆ ದೂರು ನೀಡಿದೆ.
ಮೈಸೂರು- ಚಾಮರಾಜನಗರದ ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟದಲ್ಲಿ ನಂಬರ್ ಒನ್ ಎಂದು ಅಭ್ಯರ್ಥಿ ಸಿ.ಎನ್.ಮಂಜೇಗೌಡ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜೆಡಿಎಸ್ ಮುಖಂಡರು ದೂರು ನೀಡಿದ್ದಾರೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ರವಿಚಂದ್ರೇಗೌಡ, ಎಸ್.ಟಿ.ಸೋಮಶೇಖರ್ ನಮ್ಮ ಅಭ್ಯರ್ಥಿ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಇವರ ಆರೋಪಗಳು ಚುನಾವಣಾ ನೀತಿ ಸಮಿತಿಯ ಸ್ಪಷ್ಟ ಉಲ್ಲಂಘನೆ ಎಂದು ದೂರಿದರು.
ಸಚಿವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ. ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಉಪಮಹಾಪೌರ ವಿ.ಶೈಲೇಂದ್ರ, ಪಾಲಿಕೆ ಮಾಜಿ ಸದಸ್ಯ ಜೆ.ವಿ.ಮಲ್ಲೇಶ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟದಲ್ಲಿ ನಂಬರ್ 1: ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಆರೋಪ