ಶಿವಮೊಗ್ಗ: ಆರೋಗ್ಯ ಕರ್ನಾಟಕ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿವಮೊಗ್ಗ ನಂ.1 ಸ್ಥಾನಕ್ಕೆ ಏರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರೇರಣಾ ಸಂಸ್ಥೆಯು ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆಬ್ರವರಿ 27 ರಿಂದ 29 ರವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ 83,273 ಕಾರ್ಡ್ ವಿತರಿಸಿ, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಮೊದಲ ಸ್ಥಾನಕ್ಕೆ ಏರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನ 42 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 14,190, ಭದ್ರಾವತಿ ತಾಲೂಕಿನ 41 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 11,678, ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 8,781, ಸಾಗರ ತಾಲೂಕಿನ 34 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 8,079, ಸೊರಬ ತಾಲೂಕಿನ 41 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 11,139, ಶಿಕಾರಿಪುರ ತಾಲೂಕಿನ 44 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 13,978, ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 7,867 ಹಾಗೂ ಬೈಂದೂರು ಪ್ರದೇಶದ ವ್ಯಾಪ್ತಿಯಲ್ಲಿ 1,867 ಮತ್ತು ನಗರ ಮತ್ತು ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿ.ಹೆಚ್.ಸಿ. ಮೂಲಕ 6,048 ಜನರಿಗೆ ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶಯದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರೇರಣಾ ಟ್ರಸ್ಟ್, ಬೈಂದೂರು ಮತಕ್ಷೇತ್ರ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಡ್ಗಳ ವಿತರಣೆಗಾಗಿ ವಿಶೇಷ ಆಂದೋಲನವನ್ನು ಆಯೋಜಿಸಿತ್ತು. ಇದರಿಂದಾಗಿ 75,000 ಕ್ಕೂ ಅಧಿಕ ಸಂಖ್ಯೆಯ ಜನರು ಆರೋಗ್ಯ ಕಾರ್ಡ್ನ್ನು ಪಡೆದುಕೊಂಡಿದ್ದರು. ಇದರಿಂದಾಗಿ ಈವರೆಗೆ ಒಟ್ಟು 1,58,273 ಜನ ಕಾರ್ಡ್ಗಳನ್ನು ಪಡೆದುಕೊಂಡಂತಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಯೋಜನೆ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 313 ಬಾಪೂಜಿ ಸೇವಾ ಕೇಂದ್ರಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿನ 19 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಕಾರ ಪ್ರಮುಖವಾಗಿದೆ. ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಸಹಕರಿಸಿದ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ಜಿಲ್ಲಾ ಪಂಚಾಯಿತಿ ಅಧೀನಕ್ಕೊಳಪಟ್ಟ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ವರ್ಗ, ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಅಭಿನಂದನಾರ್ಹರು ಎಂದು ತಿಳಿಸಿದ್ದಾರೆ.