ಶಿವಮೊಗ್ಗ: ಸರ್ಕಾರ ಘೋಷಣೆ ಮಾಡಿದಂತೆ ನಮಗೂ ಲ್ಯಾಪ್ಟಾಪ್ ನೀಡಬೇಕು ಎಂದು ಆಗ್ರಹಿಸಿ ಸಾಗರದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಸಾಗರದ ಪ್ರಥಮ ದರ್ಜೆ ಪದವಿ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಕಾಲೇಜು ಆವರಣದಿಂದ ಉಪವಿಭಾಗಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆ ನಡೆಸಿದರು. ನಂತರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕಪಡಿಸಿದರು.
ಸರ್ಕಾರ ಕಳೆದ ವರ್ಷ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೂ ಸಹ ಲ್ಯಾಪ್ಟಾಪ್ ನೀಡುವುದಾಗಿ ಹೇಳಿತ್ತು. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಇನ್ನೂ ಲ್ಯಾಪ್ಟಾಪ್ ನೀಡಿಲ್ಲ. ತಕ್ಷಣ ಲ್ಯಾಪ್ಟಾಪ್ ನೀಡಿ ಎಂದು ಆಗ್ರಹಿಸಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಿದರು.