ಬಾಗಲಕೋಟೆ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರನ್ನು ಸಾಕ್ಷರರನ್ನಾಗಿಸಲು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದರು.
ಬಾದಾಮಿ ತಾಲೂಕಿನ ಕೆಲವಡಿ ಗ್ರಾಮ ಪಂಚಾಯತಿಯಲ್ಲಿಂದು ಜಿಲ್ಲಾ ಪಂಚಾಯತ್, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಹಾಗೂ ಗ್ರಾಮ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಅಕ್ಷರ ಜ್ಞಾನ ಅವಶ್ಯವಾಗಿದ್ದು, ಸರ್ಕಾರ ರೂಪಿಸಿದ ಯೋಜನೆಗಳ ಬಗ್ಗೆ ತಿಳಿದುಕೊಳ್ಳಬೇಕಾದರೆ ನಾವು ಮೊದಲು ಸಾಕ್ಷರರಾಗಬೇಕು. ಅಂದಾಗ ಮಾತ್ರ ಯೋಜನೆ ಲಾಭ ಪಡೆಯಲು ಸಾಧ್ಯವಾಗುತ್ತದೆ.
ಪ್ರತಿಯೊಂದಕ್ಕೂ ಮತ್ತೊಬ್ಬರನ್ನು ಅವಲಂಬಿತರಾಗದೇ ಸ್ವತಃ ತಾವೇ ಓದಲು ಮತ್ತು ಬರೆಯಲಿ ಕಲಿಯಬೇಕು. ಸರ್ಕಾರಿ ಅಧಿಕಾರಿಗಳು ಪ್ರತಿಯೊಬ್ಬರಿಗೂ ಯೋಜನೆ ಲಾಭವನ್ನು ತಿಳಿಸಲು ಸಾಧ್ಯವಾಗುವುದಿಲ್ಲ.ಯೋಜನೆಗಳ ಮಾಹಿತಿಯನ್ನು ಬರಹಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ. ನಿಮಗೆ ಓದಲು ಬರದೇ ಇದ್ದರೆ ಸರ್ಕಾರ ರೂಪಿಸಿದ ಯೋಜನೆ ಮಾಹಿತಿ ತಿಳಿದುಕೊಳ್ಳಲು ಸಾಧ್ಯವಾಗುವದಿಲ್ಲ. ಆದ್ದರಿಂದ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಅಕ್ಷರಸ್ಥರಾಗಬೇಕು ಎಂದರು.