ಬಾಗಲಕೋಟೆ: ನವನಗರದಲ್ಲಿರುವ ಏಳು ವಸತಿ ನಿಲಯಗಳಿಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ವಾರ್ಡನ್ಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಹಿಂದುಳಿದ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಸೇರಿ ಒಟ್ಟು ಏಳು ವಸತಿ ನಿಲಯಗಳಿಗೆ ಭೇಟಿ ನೀಡಿದ ಶಾಸಕರು, ಕೊಠಡಿ ಹಾಗೂ ವಸತಿ ನಿಲಯಗಳ ಮೇಲ್ಛಾವಣಿಯಲ್ಲಿ ಸ್ಪಚ್ಛತೆ ಕಾಪಾಡಿಕೊಳ್ಳದಿರುವುದು ಹಾಗೂ ವಸ್ತುಗಳನ್ನು ಬೇಕಾಬಿಟ್ಟಿಯಾಗಿ ಎಸೆದಿರುವುದನ್ನು ಕಂಡು ಅಧಿಕಾರಿಗಳ ಮೇಲೆ ಗರಂ ಆದರು.
ಸರ್ಕಾರದ ಸಂಬಳ ತೆಗೆದುಕೊಂಡು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ವಸತಿ ನಿಯಲಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ಬರಬೇಕು. ಇಲ್ಲದಿದ್ದರೆ ಅವರ ಸಂಬಳವನ್ನು ತಡೆಹಿಡಿಯಲಾಗುವುದು. ಎಲ್ಲರೂ ಶಿಸ್ತಿನಿಂದ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವವರು ಸರಿಯಾಗಿ ಕೆಲಸ ಮಾಡದಿದ್ದರೆ ಏಜೆನ್ಸಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.